ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ಅಭಿವೃದ್ಧಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ 2023- 24ನೇ ಸಾಲಿನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಸರ್ಕಾರವು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅಭಿವೃದ್ಧಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಿಸಬೇಕು. ಪ್ರತಿ ಇಲಾಖೆಯಡಿ ಬರುವ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಹಳ್ಳಿ ಹಳ್ಳಿಗೂ ಜಾಗೃತಿ ಮೂಡಿಸುವ ಮೂಲಕ ಮಾಹಿತಿ ನೀಡಬೇಕು. ಜನಸಾಮಾನ್ಯರಿಗೆ ಸೌಲಭ್ಯಗಳನ್ನು ತಲುಪಿಸುವಲ್ಲಿ ಪಾರದರ್ಶಕವಾಗಿ, ಜವಾಬ್ದಾರಿಯುತವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು” ಎಂದರು.
“ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಸ್ಮಶಾನ ಭೂಮಿ ಸಮಸ್ಯೆ, ಸ್ಮಶಾನ ದುರಸ್ತಿ ಕಾರ್ಯ, ಸ್ಮಶಾನಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದು, ಸ್ಮಶಾನ ಜಾಗಕ್ಕೆ ಸೂಕ್ತ ರೀತಿಯಲ್ಲಿ ಬೇಲಿ ನಿರ್ಮಿಸಿ ಹದ್ದುಬಸ್ತು ಮಾಡಬೇಕು. ಸ್ಮಶಾನದ ಅವಶ್ಯಕತೆ ಇರುವ ಭಾಗದಲ್ಲಿ ಸಂಬಂಧಪಟ್ಟ ತಾಲೂಕು ತಹಶೀಲ್ದಾರ್ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅವಶ್ಯವಿದ್ದಲ್ಲಿ ಖಾಸಗಿ ಜಮೀನಿಗೆ ಪ್ರಸ್ತಾವನೆ ಸಲ್ಲಿಸಿ” ಎಂದು ಸೂಚಿಸಿದರು.
ಆಶ್ರಯ ಯೋಜನೆ : “ವಸತಿ ಯೋಜನೆಯಡಿ ನಿವೇಶನ ರಹಿತ ಕುಟುಂಬಗಳನ್ನು ಈಗಾಗಲೇ ಗುರುತಿಸಿದ್ದು, ಬಡವರಿಗೆ ನಿವೇಶನ ಹಂಚಲು ಕ್ರಮ ವಹಿಸಲಾಗಿದೆ. ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ಸುಮಾರು 400 ಎಕರೆ ಸರ್ಕಾರಿ ಭೂಮಿ ನಿವೇಶನಕ್ಕಾಗಿ ಗುರ್ತಿಸಲಾಗಿದೆ. ಶೀಘ್ರವಾಗಿ ರಾಜೀವ್ ಗಾಂಧಿ ಕಾರ್ಪೋರೇಶನ್ಗೆ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಿ” ಎಂದರು.
“ಜಿಲ್ಲೆಯಲ್ಲಿ 1,87,000 ಜಾನುವಾರುಗಳಿವೆ. ಪಶುಪಾಲನೆ ಇಲಾಖೆಯಿಂದ ಅಂದಾಜು 60,000 ಮೇವಿನ ಕಿರು ಪೊಟ್ಟಣ ಹಾಗೂ ಕೆಎಂಎಫ್ನಿಂದ 40,000 ಮೇವಿನ ಕಿರು ಪೊಟ್ಟಣಗಳನ್ನು ನೀರಾವರಿ ಹೊಂದಿರುವ ರೈತರಿಗೆ ಉಚಿತವಾಗಿ ವಿತರಿಸಲಾಗಿದೆ” ಎಂದು ಪಶುಪಾಲನಾ ಇಲಾಖೆ ಡಿಡಿ ಸಭೆಗೆ ಮಾಹಿತಿ ನೀಡಿದರು.
ಪೋಡಿಮುಕ್ತ ಜಿಲ್ಲೆ ಗುರಿ : “ಪೋಡಿಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡ ನಾಲ್ಕು ತಾಲೂಕುಗಳಲ್ಲಿ ತಂಡಗಳನ್ನು ರಚಿಸಬೇಕು. ಪೂರಕ ದಾಖಲೆಗಳು ಇರುವ ಜಮೀನುಗಳಲ್ಲಿ ಮೊದಲು ಸರ್ವೇ ಕಾರ್ಯ ನಡೆಸಿ ಹದ್ದುಬಸ್ತು ಮಾಡಬೇಕು. ಕೆಲವು ಭಾಗಗಳಲ್ಲಿ ಕಡತಗಳು ನಾಪತ್ತೆ ಆಗಿರುವುದರಿಂದ ಹಿನ್ನಡೆ ಆಗುತ್ತಿದೆ. ಕಡತ ಇರುವ ಪ್ರಕರಣಗಳಲ್ಲಿ ಪೋಡಿಮುಕ್ತ ಮಾಡಲು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಸಾಗುವಳಿ ಚೀಟಿ ಇರುವ ಪ್ರಕರಣಗಳನ್ನು ಎರಡನೇ ಹoತದಲ್ಲಿ ಮಾಡಲಾಗುವುದು. ತಹಶೀಲ್ದಾರ್ಗಳಿಗೆ ಗುರಿ ನಿಗದಿಪಡಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಶಿವಶಂಕರ್ ಸಭೆಗೆ ಮಾಹಿತಿ ನೀಡಿದರು.
“ಪೋಡಿಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು. ಆರು ತಿಂಗಳಲ್ಲಿ ಒಂದು ಹಂತಕ್ಕೆ ಪೋಡಿ ಕಾರ್ಯ ಪೂರ್ಣಗೊಳ್ಳಬೇಕು” ಎಂದು ಸಚಿವರು ಹೇಳಿದರು.
“ಜಿಲ್ಲೆಯಲ್ಲಿ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಾರದಲ್ಲಿ ಒಂದು ಶಾಲೆಗೆ ಕಡ್ಡಾಯವಾಗಿ ಭೇಟಿ ನೀಡಿ, ಅಲ್ಲಿನ ಶೈಕ್ಷಣಿಕ ಪ್ರಗತಿ ಪರಿಶೀಲಿಸುವ ಜತೆಗೆ ಕುಂದು ಕೊರತೆಗಳನ್ನು ಆಲಿಸುವ ಕೆಲಸ ಮಾಡಬೇಕು. ಅಲ್ಲದೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪ್ರತಿ ವಿದ್ಯಾರ್ಥಿ ಶೇ.70ರಿಂದ ಶೇ.80ಕ್ಕೂ ಅಧಿಕ ಅಂಕದೊಂದಿಗೆ ತೇರ್ಗಡೆಯಾಗುವಂತೆ ಬೋಧನೆಗೆ ಕ್ರಮ ವಹಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
“ಜನಸಂಖ್ಯಾ ಒತ್ತಡ ಹೆಚ್ಚಿರುವ ನಗರ ಪ್ರದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಚರಂಡಿಗಳ ಸ್ವಚ್ಚತೆಯ ಜತೆಗೆ ನೀರು ನಿಲ್ಲದಂತೆ ಕ್ರಮವಹಿಸುವುದರ ಜತೆಗೆ ಸೊಳ್ಳೆ ಲಾರ್ವಾ ನಾಶ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು” ಎಂದರು.
“ಹೊಸ ರಾಷ್ಟ್ರೀಯ ಹೆದ್ದಾರಿಗಳು ನಿರ್ಮಿಸುವ ಸಂದರ್ಭದಲ್ಲಿ ಯಾವ ಹಳ್ಳಿಗೂ ತೊಂದರೆ ಆಗದಂತೆ ಪ್ರತಿ ಹಳ್ಳಿಗೂ ಹಾದು ಹೋಗುವ ರಸ್ತೆಗಳ ಸಮೀಪದಲ್ಲಿಯೇ ಕೆಳ ಸೇತುವೆ(ಅಂಡರ್ ಪಾಸ್) ನಿರ್ಮಿಸಬೇಕು. ರಸ್ತೆ ನಿರ್ಮಿಸುವ ಸಂದರ್ಭದಲ್ಲಿ ರಾಜ ಕಾಲುವೆ, ನದಿ, ಕೆರೆ ಕಟ್ಟೆಗಳ ಗುರುತನ್ನು ನಿಖರವಾಗಿ ಗುರುತಿಸಿ ರಸ್ತೆ ನಿರ್ಮಿಸಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಕುಂದಾಪುರ | ಶಿಥಿಲಗೊಂಡ ಬೆಳ್ಕಲ್ ಶಾಲೆಯ ಮುಂಭಾಗದ ಕಿರು ಸೇತುವೆ: ಸೂಕ್ತ ಕ್ರಮಕ್ಕೆ ದಸಂಸ ಆಗ್ರಹ
ಸಭೆಯಲ್ಲಿ ಹೊಸಕೋಟೆ ಶಾಸಕ ಹಾಗೂ ಕಿಯೋನಿಕ್ಸ್ ಅಧ್ಯಕ್ಷ ಶರತ್ ಕುಮಾರ್ ಬಚ್ಚೇಗೌಡ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ(ಬಯಪ್ಪ) ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ್, ಜಿಪಂ ಸಿಇಒ ಡಾ ಅನುರಾಧ, ಎಸ್ಪಿ ಸಿ ಕೆ ಬಾಬಾ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ ಕೆ ರಮೇಶ್, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಡಾ ಹೆಚ್ ನಟರಾಜ್ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಸ್ಥಳೀಯ ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಇದ್ದರು. ಸಚಿವ ಕೆ ಹೆಚ್ ಮುನಿಯಪ್ಪ