- ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಿಇಒ ಎಂ ಎನ್ ಪ್ಯಾಟಿ
- ಯಾವ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ದೃಢಪಟ್ಟಿಲ್ಲ
ಎಸ್ಎಸ್ಎಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ ಎನ್ನಲಾಗಿದೆ.
ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಎನ್ ಪ್ಯಾಟಿ ಅವರು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಶಿಕ್ಷಕರಿಂದ ಮಾಹಿತಿ ಕಲೆಹಾಕಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೊದಲ ದಿನದ ಎಸ್ಎಸ್ಎಲ್ಸಿ ಪರೀಕ್ಷೆ; ಶೇ 98.48 ಹಾಜರಾತಿ
ಈ ಪರೀಕ್ಷೆ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆಯುತ್ತಿರುವಾಗಲೇ ಈ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಶಿಕ್ಷಕರೇ ಇದಕ್ಕೆ ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
“ಹಣಬರಹಟ್ಟಿ ಕೇಂದ್ರಕ್ಕೆ ಭೇಟಿ ನೀಡಿ, ಎಲ್ಲ ಆಯಾಮಗಳಿಂದ ಪರಿಶೀಲಿಸಿದ್ದೇನೆ. ಆದರೆ, ಇದೇ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ದೃಢಪಟ್ಟಿಲ್ಲ” ಎಂದು ಕೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.