ಬೆಳಗಾವಿ ಜಿಲ್ಲೆಯ ನಿಪಾಣಿ ತಾಲೂಕಿನ ಮನಕಾಪುರ ಗ್ರಾಮದಲ್ಲಿ 24 ವರ್ಷದ ಯುವಕನೊಬ್ಬ ಡೆಂಗ್ಯೂಗೆ ಬಲಿಯಾಗಿದ್ದಾರೆ.
ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ರಾಹುಲ್ ಶೆಂಡೂರೆ ಮೃತ ದುರ್ದೈವಿ. ರಾಹುಲ್ ಅವರು ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿತ್ತು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸೋಮವಾರ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳಿದಿದ್ದಾರೆ.
ಅವರ ಸಾವಿನಿಂದ ಎಚ್ಚೆತ್ತ ಜಿಲ್ಲಾಡಳಿತ, ಮನಕಾಪುರ ಗ್ರಾಮದಲ್ಲಿ ರೋಗ ಹರದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸೊಳ್ಳೆನಾಶಕ ಸಿಂಪಡಣೆ, ಚರಂಡಿಗಳ ಸ್ವಚ್ಛತೆ, ನೀರು ನಿಲ್ಲದಂತೆ ನೋಡಿಕೊಳ್ಳಲಾಗುತ್ತಿದೆ.