ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆ ತಡೆದ ಪ್ರತಿಭಟಿಸಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತರನ್ನು ತಡೆಯಲು ಮುಂದಾದ ಪೊಲೀಸರ ಜೊತೆ ವಾಗ್ವಾದ ನಡೆಯಿತು. ಪೊಲೀಸ್ ಅಧಿಕಾರಿಗಳು ರೈತರ ಮನವೊಲಿಕೆಗೆ ಯತ್ನಿಸಿದರು. ರೈತರು ಪಟ್ಟು ಬಿಡಲಿಲ್ಲ.
ಕೃಷಿ ಸಾಲ ನೀತಿ ಬದಲಾಗಬೇಕು, ಎಲ್ಲ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಡ್ಡಿ ರಹಿತ ಸಾಲ ಸೌಕರ್ಯ ಒದಗಿಸಬೇಕು, ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿಯಲ್ಲಿ ಮೋಸ ಮಾಡುತ್ತವೆ ಇದನ್ನು ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು. ಕೀಟನಾಶಕ, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಮತ್ತು ಟ್ರ್ಯಾಕ್ಟರ್ಗಳ ಬಿಡಿಭಾಗಗಳಿಗೆ ಜಿಎಸ್ಟಿ ವಿಧಿಸುತ್ತಿರುವುದನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದರು.
ಖಾನಾಪುರ ತಾಲೂಕಿನಲ್ಲಿ 210 ಗ್ರಾಮ ಮತ್ತು 51 ಗ್ರಾಮ ಪಂಚಾಯ್ತಿಗಳಿವೆ. ಇಲ್ಲಿ ಕೊರೆಯಲಾಗಿದ್ದ ಕೊಳವೆ ಬಾವಿಗಳು ಬತ್ತಿಹೋಗಿವೆ. ಜನ-ಜಾನುವಾರುಗಳಿಗೆ ತಾಲೂಕಿನಲ್ಲಿ ಕುಡಿಯುವ ನೀರಿಲ್ಲ. ಮಹಾರಾಷ್ಟ್ರ ಮತ್ತು ಗೋವಾ ಗಡಿಗೆ ಹೊಂದಿಕೊಂಡ ಈ ತಾಲೂಕು ಎಲ್ಲ ಸರ್ಕಾರಗಳ ಅವಧಿಯಲ್ಲೂ ಕಡೆಗಣನೆಗೆ ಒಳಗಾಗಿದೆ. ಇಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕು. ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವುದಕ್ಕಾಗಿ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.