ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಜಿಲ್ಲೆಗೆ ಒಂದೇ ಸಚಿವ ಸ್ಥಾನ ದೊರೆತು, ಅದು ಲಕ್ಷ್ಮಣ ಸವದಿ ಅವರ ಪಾಲಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ರಾಮದುರ್ಗ ಶಾಸಕ ಅಶೋಕ ಪಟ್ಟಣ ಮೊದಲ ಬಾರಿಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆಗುವದೆಲ್ಲ ಒಳ್ಳೆಯದಕ್ಕೆ. ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.
“ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿರುವ ಸಚಿವರಿಗಿಂತ ನಾನು ಹಿರಿಯ ಶಾಸಕ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ನನ್ನ ಸೇವೆ ಮತ್ತು ಪಕ್ಷದ ಮೇಲಿನ ನಿಷ್ಠೆ ಗೊತ್ತಿದೆ. ಆದರೂ ಸಚಿವ ಸ್ಥಾನ ಸಿಗದಿರುವುದು ಸಹಜವಾಗಿ ಬೇಸರ ತಂದಿದೆ. ಆದರೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು.
ದೇವರಾಜ ಅರಸು ಅವರ ಕಾಲದಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಜಿಲ್ಲಾವಾರು ಹಾಗೂ ಜಾತಿವಾರು ಸಮೀಕರಣಕ್ಕೆ ಆದ್ಯತೆ ನೀಡಲಾಗಿದೆ. ಶರಣಪ್ರಕಾಶ ಪಾಟೀಲ ಮತ್ತು ಈಶ್ವರ ಖಂಡ್ರೆ ಇಬ್ಬರೂ ಬಣಜಿಗ ಸಮುದಾಯದವರಾಗಿರುವ ಕಾರಣ, ಅದೇ ಸಮುದಾಯಕ್ಕೆ ಸೇರಿದ ನನಗೆ ಅವಕಾಶ ದೊರೆಯಲಿಲ್ಲ ಎಂದು ಭಾವಿಸುತ್ತೇನೆ ಎಂದು ಹೇಳಿದರು.
ಆದರೆ ಇದರಿಂದ ನಿರುತ್ಸಾಹಗೊಳ್ಳುವುದಿಲ್ಲ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.



