ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ತಾಲೂಕ ಪಂಚಾಯತಿ ಸದಸ್ಯ ರಾಜು ಪಾಟೀಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ರಾತ್ರಿ, ಮುಗಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಆರೋಪಿಗಳು ಮೊದಲು ಖಾರದ ಪುಡಿ ಎರಚಿ ನಂತರ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಪಾಟೀಲ್ ಅವರ ಕೈ ಬೆರಳುಗಳು ತುಂಡಾಗಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಪ್ರಸ್ತುತ ಅವರು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ವೈಯಕ್ತಿಕ ಜಗಳ ಹಿನ್ನಲೆಯಲ್ಲಿ ಗ್ರಾಮದ ಹೆಡ್ ಮಾಸ್ಟರ್ ಹಾಗೂ ಅವರ ಪುತ್ರ ಈ ದಾಳಿಗೆ ಕಾರಣರಾಗಿದ್ದಾರೆಂದು ಶಂಕಿಸಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.