ನಕಲಿ ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಆಡಳಿತಾಧಿಕಾರಿ (ವಿಎಒ) ಹುದ್ದೆ ಗಿಟ್ಟಿಸಿಕೊಂಡಿದ್ದ ನಾಲ್ವರಿಗೆ ಬೆಳಗಾವಿಯ ಎರಡನೇ ಜೆಎಂಎಫ್ಸಿ ನ್ಯಾಯಾಲಯ ತಲಾ ಎರಡು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹19 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಶಿಕ್ಷೆಗೆ ಗುರಿಯಾದವರು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅನೆಹಳ್ಳಿ ಗ್ರಾಮದ ರಾಜು ವೆಂಕಟೇಶಪ್ಪ ಟಿ., ಕುನ್ನಿಬಂಡಿ ಗ್ರಾಮದ ಮೋಹನ್ಕುಮಾರ್ ಚಂದ್ರಪ್ಪ, ಮದ್ದೇರಿ ಗ್ರಾಮದ ಮಂಜುನಾಥ ಬೈಚಪ್ಪ ಹಾಗೂ ಅನೆಹಳ್ಳಿ ಗ್ರಾಮದ ಬಾಲಕೃಷ್ಣ ವೆಂಕಟಪ್ಪ.
ಪ್ರಕರಣದ ವಿವರದಂತೆ, 2012ರ ಸೆಪ್ಟೆಂಬರ್ 6ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಬೆಳಗಾವಿ ಜಿಲ್ಲಾಡಳಿತ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ವೇಳೆ ಆರೋಪಿಗಳು ಬೆಂಗಳೂರಿನ ಅಪರಿಚಿತ ವ್ಯಕ್ತಿಯೊಬ್ಬರಿಂದ ನಕಲಿ ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಪಡೆದು, ಅವುಗಳಲ್ಲಿ ಹೆಚ್ಚಿನ ಅಂಕಗಳನ್ನು ತೋರಿಸಿ ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದು ಗ್ರಾಮ ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿದ್ದರು.
ನೇಮಕಾತಿಯ ನಂತರ ದಾಖಲೆಗಳ ಪರಿಶೀಲನೆ ವೇಳೆ ಸಲ್ಲಿಸಿದ್ದ ಅಂಕಪಟ್ಟಿಗಳು ನಕಲಿಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಎನ್. ಜಯರಾಮ್ ಅವರು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳು ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಬಳಸಿ ಸರ್ಕಾರಿ ಉದ್ಯೋಗ ಪಡೆದಿರುವುದನ್ನು ದೃಢಪಡಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಜೆಎಂಎಫ್ಸಿ ನ್ಯಾಯಾಲಯ, ಅಭಿಯೋಜಕರು ಮಂಡಿಸಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ನಾಲ್ವರನ್ನು ದೋಷಿಗಳೆಂದು ಘೋಷಿಸಿತು.



