ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯರಗಟ್ಟಿ ಘಟಕದ ವತಿಯಿಂದ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು.
ಯರಗಟ್ಟಿ ಬಸ್ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಆಗಮಿಸುತ್ತಾರೆ. ಆದರೆ ಬಸ್ ನಿಲ್ದಾಣದ ಆವರಣದಲ್ಲಿರುವ ಒಳಚರಂಡಿಗಳು ಹದಗೆಟ್ಟಿದ್ದು, ತ್ಯಾಜ್ಯ ನೀರು ಹೊರಹರಿದು ದುರ್ನಾತ ಬೀರುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ರೋಗರುಜಿನಗಳ ಭೀತಿಯೂ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಯರಗಟ್ಟಿ ಗೋಕಾಕ, ಸವದತ್ತಿ, ರಾಮದುರ್ಗ ಹಾಗೂ ಬೈಲಹೊಂಗಲ ತಾಲೂಕುಗಳಿಗೆ ಪ್ರಮುಖ ಸಂಪರ್ಕ ಕೇಂದ್ರವಾಗಿರುವುದರಿಂದ, ಪಟ್ಟಣದಲ್ಲಿ ಶೀಘ್ರವಾಗಿ ಬಸ್ ಘಟಕವನ್ನು ಸ್ಥಾಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದರ ಜೊತೆಗೆ ಬಸ್ ನಿಲ್ದಾಣದಲ್ಲಿ ಸೂಕ್ತ ಸಿಸಿಟಿವಿ ಹಾಗೂ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಬೈಕ್ಗಳು ಹಾಗೂ ಸಾರ್ವಜನಿಕರ ಮೊಬೈಲ್ಗಳು ಕಳ್ಳತನವಾಗುತ್ತಿರುವ ದೂರುಗಳಿವೆ. ಹೀಗಾಗಿ ಪ್ರಯಾಣಿಕರ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಸಿ, ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರಫೀಕ ಡಿ.ಕೆ. ಸೇರಿದಂತೆ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.



