ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಅಂಬೇಡ್ಕರ್ ನಗರದ ಮೂಲಸೌಕರ್ಯ ಹಾಗೂ ಸರ್ಕಾರಿ ಶಾಲೆಯ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಆಗ್ರಹಿಸಿ ಅಂಬೇಡ್ಕರ್ ನಗರದ ಸಮಸ್ತ ನಾಗರಿಕರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ವತಿಯಿಂದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಕಟ್ಟಡ ಮತ್ತು ಕೂಲಿ ಕಾರ್ಮಿಕ ಸಂಘಟನೆಯ ಬಾಬು ಚೆನ್ನಮೇತ್ರಿ ಅವರ ಸಮ್ಮುಖದಲ್ಲಿ ನಾಗರಿಕರು ಮನವಿ ಸಲ್ಲಿಸಿ, ಬಡಾವಣೆಯ ಜನರು ಹಾಗೂ ಶಾಲಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ತುರ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಸರ್ಕಾರಿ ಅಂಬೇಡ್ಕರ್ ಶಾಲೆಯ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಮಕ್ಕಳ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.
ಅಂಬೇಡ್ಕರ್ ನಗರದ ದುರ್ಗಾದೇವಿ ದೇವಸ್ಥಾನದಿಂದ ತಳದಮ್ಮ ದೇವಸ್ಥಾನದ ಮುಂದಿನ ರಸ್ತೆಯವರೆಗೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ರಸ್ತೆಯ ನೀರು ಸರಿಯಾಗಿ ಹರಿದುಹೋಗದೆ, ಕುಡಿಯುವ ನೀರಿನ ಪೈಪ್ಲೈನ್ಗಳು ಹೊರಗೆ ಕಾಣಿಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಂಬೇಡ್ಕರ್ ನಗರದ ಗವನಕೆರೆಯಲ್ಲಿ ಮಳೆ ನೀರು ಹಾಗೂ ಇತರ ನೀರು ಸಂಗ್ರಹವಾಗುತ್ತಿರುವುದರಿಂದ ಕೆರೆಯ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ನೀರು ಸುಗಮವಾಗಿ ಹರಿದುಹೋಗಲು ಸೂಕ್ತ ಕಾಲುವೆ ಅಥವಾ ಚರಂಡಿ ವ್ಯವಸ್ಥೆ ಕಲ್ಪಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಅಂಬೇಡ್ಕರ್ ನಗರದ ಸರ್ಕಾರಿ ಶಾಲೆಯಲ್ಲಿ 260ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ತರಗತಿ ಕೊಠಡಿಗಳ ಕೊರತೆ ಇದೆ. ಆದ್ದರಿಂದ ಹೆಚ್ಚುವರಿ ತರಗತಿ ಕೊಠಡಿಗಳನ್ನು ಮಂಜೂರು ಮಾಡುವುದರ ಜೊತೆಗೆ, ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಶಾಲಾ ಆವರಣದಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಿಸಿಕೊಡಬೇಕು ಎಂದು ಮನವಿಯಲ್ಲಿ ಕೋರಿದರು.
ಬಡಾವಣೆಯ ಮೂಲಸೌಕರ್ಯ ಹಾಗೂ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ನಾಗರಿಕರು ಹಾಗೂ SDMC ಸದಸ್ಯರು ಶಾಸಕ ವಿಶ್ವಾಸ ವೈದ್ಯ ಅವರಿಗೆ ಮನವಿ ಮಾಡಿದರು.



