ನಿಸರ್ಗ ಕೊಡುಗೆಯಾದ ನೀರನ್ನು ಸಂರಕ್ಷಿಸುವುದು ಎಲ್ಲರ ಹೊಣೆ. ಎಲ್ಲರೂ ಮಿತವಾಗಿ ಬಳಸುವುದರ ಮೂಲಕ ಜಲಮೂಲ ಸಂರಕ್ಷಿಸೋಣ ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಕರೆ ನೀಡಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ವೀರಶೈವ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಜಲ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಸಂವಿಧಾನವು ಮೂಲಭೂತ ಹಕ್ಕುಗಳನ್ನು ನೀಡುವುದರ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಸಹ ನೀಡಿದೆ. ಅದರಲ್ಲಿ ಪರಿಸರ ರಕ್ಷಣೆ ಜೊತೆಗೆ ನೀರು ಸಂರಕ್ಷಣೆಯೂ ಒಳಗೊಂಡಿದೆ. ಸುಸ್ಥಿರ ಅಭಿವೃದ್ಧಿಯ ಮೂಲಕ ನೀರನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೂ ನೀಡಬೇಕು. ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿದೆ. ಕುಡಿಯುವ ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಏ.10 ರವರೆಗೆ ತುಂಗಭದ್ರ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಯಲಿದ್ದು, ಕೃಷಿ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕಾಗುತ್ತದೆ. ಹಾಗಾಗಿ ನೀರನ್ನು ಮಿತವಾಗಿ ಬಳಸಲು ಸೂಚಿಸಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಮಾತನಾಡಿ, “ಸಕಲ ಜೀವರಾಶಿಗಳಿಗೆ ನೀರು ಬಹುಮುಖ್ಯವಾಗಿದೆ. ಭೂ ಮಂಡಲದಲ್ಲಿ ಇರುವ ನೀರಿನ ಪ್ರಮಾಣದಲ್ಲಿ ಶೇ.97ರಷ್ಟು ಉಪ್ಪು ನೀರು ಇದ್ದು, ಶೇ3.ರಷ್ಟು ಮಾತ್ರ ಸಿಹಿ ನೀರು ಬಳಕೆಗೆ ಉಪಯುಕ್ತವಾಗಿದೆ. ಇದರಲ್ಲಿ ಕೇವಲ ಶೇ.0.07ರಷ್ಟು ನೀರು ಕುಡಿಯಲು ಬಳಕೆಯಾಗುತ್ತಿದೆ. ಉಳಿದ ನೀರು ಘನ ರೂಪದಿ ಹಿಮಪಾತಗಳಲ್ಲಿದೆ. ಬೇಸಿಗೆ ಬಂತೆಂದರೆ ಕುಡಿಯುವ ನೀರಿನ ಬರ ಎದುರಾಗಿ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ನೀರನ್ನು ಅತಿಯಾಗಿ ಪೋಲು ಮಾಡದೆ ಅಗತ್ಯವಿರುವಷ್ಟು ಮಾತ್ರ ಬಳಸಬೇಕು. ಭೂಮಿಯ ಮೇಲೆ ಎಲ್ಲಾ ಜೀವಿಗಳಿಗೂ ಬದುಕುವ ಹಕ್ಕಿದೆ. ಎಲ್ಲಾ ಜೀವಿಗಳಿಗೂ ನೀರು ಅತ್ಯವಶ್ಯಕವಾಗಿದೆ. ಸಮುದ್ರಗಳು ಕಡಲತೀರ ಕೊರೆದು ಭೂಮಿಯನ್ನು ಅತಿಕ್ರಮಿಸುತ್ತಿವೆ. ಪ್ರಸ್ತುತದಲ್ಲಿ ಸಣ್ಣ-ಸಣ್ಣ ನದಿ, ಹಳ್ಳಗಳು ಕಣ್ಮರೆಯಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ
ಕಾರ್ಯಕ್ರಮದಲ್ಲಿ ʼವಿಶ್ವ ಜಲ ದಿನʼ ಅಂಗವಾಗಿ ಪ್ರಬಂಧ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಹೆಚ್.ಇಂದುಧರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೈ.ರಾಮಚಂದ್ರ, ರವೀಂದ್ರ ನಾಯ್ಕ, ವೀರಶೈವ ಮಹಾವಿದ್ಯಾಲಯದ ಅಧ್ಯಕ್ಷ ದರೂರು ಶಾಂತನಗೌಡ, ಸದಸ್ಯ ಖಾರದಪುಡಿ ಮುದ್ದನಗೌಡ, ಕಾಲೇಜಿನ ಪ್ರಾಚಾರ್ಯ ಜಿ.ಮಲ್ಲನಗೌಡ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.