ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೇ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೂ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮಹಾಪೌರರಾದ ಮುಲ್ಲಂಗಿ ನಂದೀಶ್ ಹೇಳಿದರು.
ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ಲಿಯಾ ಯೂತ್ ಅಸೋಸಿಯೇಷನ್(ರಿ) ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀಮತಿ ಗಾಲಿ ರುಕ್ಮಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಯುವಜನತೆಯಲ್ಲಿ ಶಿಸ್ತು, ನಾಯಕತ್ವ ಹಾಗೂ ಸಂಘಟನೆ ಮಖ್ಯ. ಶಿಕ್ಷಣದ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳುವುದರಿಂದಷ್ಟೇ ಜೀವನದಲ್ಲಿ ಮೌಲ್ಯಗಳು ಬೆಳೆಯಲು ಸಾಧ್ಯ” ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಡಾ. ಸುಧಾಕರ ಡಿ ಮಾತನಾಡಿ, “ಓದಿನೊಂದಿಗೆ ಕ್ರೀಡೆಗೂ ಒತ್ತು ನೀಡಿದಾಗ ಯುವ ಸಮುದಾಯ ಆರೋಗ್ಯವಂತರಾಗಿರಬಹುದು” ಎಂದು ತಿಳಿಸಿದರು.
ನೆಹರು ಯುವ ಕೇಂದ್ರದ ಯುವ ಅಧಿಕಾರಿ ಮೊಂಟ್ ಪತ್ತಾರ್ ಅವರು ಕ್ರೀಡೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋಖೋ, 100 ಮೀ. ಓಟದ ಸ್ಪರ್ಧೆ, ಸ್ಲೋಸೈಕಲಿಂಗ್ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ಬಳ್ಳಾರಿ | ವರ್ಷದ ಹಿಂದೆ ತಾಯಿಯಿಂದಲೇ ಮಾರಾಟವಾಗಿದ್ದ ಮಗು ಆಂಧ್ರಪ್ರದೇಶದಲ್ಲಿ ಪತ್ತೆ
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ಮುತ್ತೇಗೌಡ, ಕ್ರೀಡಾಕೂಟ ಆಯೋಜಕ ಆರ್.ಕೆ.ಅಬ್ರಹಂ, ಎನ್.ಐ.ಎಫ್.ಎ.ಎ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
