- ಗಾಯಕಿ ಸಂಗೀತಾ ಕಟ್ಟಿ ಸೇರಿದಂತೆ 10 ಮಂದಿಗೆ ಪ್ರಶಸ್ತಿ ಪ್ರಧಾನ
- ನಾನಾ ಕ್ಷೇತ್ರಗಳ ಸಾಧಕರನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶ
“ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ-2023 ಹಾಗೂ ಯುವ ತಾರೆ ಪ್ರಶಸ್ತಿ-2023 ನೀಡಲು ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ನಿರ್ಧರಿಸಿದೆ. ದಕ್ಷಿಣ ಭಾರತದಲ್ಲಿ ಮೂರನೇ ಬಾರಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ” ಎಂದು ಸಂಘದ ಮುಖಂಡ ಉಮೇಶ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಮತ್ತು ಕಬ್ಬನ್ ಪಾರ್ಕ್ ನಡಿಗೆದಾರರ ಫೋರಂ ಸಂಯುಕ್ತಾಶ್ರಯದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು 2023ರ ಅಕ್ಟೋಬರ್ 8ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ” ಎಂದು ಹೇಳಿದ್ದಾರೆ.
“ಯುವ ಪ್ರತಿಭಾವಂತರನ್ನು ಗುರುತಿಸುವುದು, ಅವರನ್ನು ಸಬಲೀಕರಣಗೊಳಿಸುವುದು, ಪ್ರೇರೇಪಿಸುವುದು ಮತ್ತು ನಾನಾ ಕ್ಷೇತ್ರಗಳಲ್ಲಿನ ಸಾಧಕರನ್ನು ಪ್ರೋತ್ಸಾಹಿಸುವುದು ಪ್ರಶಸ್ತಿ ಮತ್ತು ಕಾರ್ಯಕ್ರಮದ ಉದ್ದೇಶವಾಗಿದೆ” ಎಂದು ಹೇಳಿದರು.
“ಕಬ್ಬನ್ಪಾರ್ಕ್ ನಡಿಗೆದಾರರ ಸಂಘವು ಪರಿಸರವನ್ನು ಸಂರಕ್ಷಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಬೆಂಗಳೂರಿನ ಅತ್ಯಂತ ಜನಪ್ರಿಯ ಉದ್ಯಾನವನ ಕಬ್ಬನ್ ಪಾರ್ಕ್ನ ಸಮೃದ್ಧ ಹಸಿರನ್ನು ಉಳಿಸಿಕೊಂಡಿದೆ. ಸಮಾಜಕ್ಕೆ ಸಕಾರಾತ್ಮಕ ಕೊಡುಗೆ ನೀಡಿದ ಮಹಿಳೆಯರು, ಯುವ ಪ್ರತಿಭೆಗಳು ಹಾಗೂ ಸಾಧಕರು ಎಂದು ನಾವು ಬಲವಾಗಿ ನಂಬಿರುವುದರಿಂದ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ | ಪ್ರಮಾಣ ವಚನ ಸ್ವೀಕರಿಸಿದ ಮೂವರು ನೂತನ ಸದಸ್ಯರು
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಕಬ್ಬನ್ಪಾರ್ಕ್ ನಡಿಗೆದಾರರ ಸಂಘದ ಮುಖಂಡ ಉಮೇಶ್, “ಕಳೆದ ಮೂರು ವರ್ಷದಿಂದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೇವೆ. ಮೊದಲ ಬಾರಿಗೆ 2019ರಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕೋವಿಡ್ ಸಮಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರಲಿಲ್ಲ. ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಸಾಮಾಜಿಕ ಕಳಕಳಿ ಇರುವವರಿಗೆ ಪುನೀತ್ ಪ್ರಶಸ್ತಿಯನ್ನು ಕಳೆದ ವರ್ಷದಿಂದ ನೀಡುತ್ತಿದ್ದೇವೆ. ಈ ಬಾರಿ ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ ಸಂಗೀತಾ ಕಟ್ಟಿ, ವೈದ್ಯಕೀಯ ಕ್ಷೇತ್ರದಿಂದ ಸುಜಾತಾ ರಾಥೋಡ್, ಪತ್ರಕರ್ತೆ ಪದ್ಮಾ, ಡಿಜಿಟಲ್ ಮೀಡಿಯಾದಿಂದ ನಿರುಪಮಾ ಸೇರಿದಂತೆ 10 ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.