ತಕ್ಷಣವೇ ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಹೋರಾಟ ಮಾಡಲಾಗುವುದು. ರಾಜ್ಯದಲ್ಲಿ ನೀರಿನ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಹೀಗಾಗಿ, ಜನರು ಸ್ವಯಂಪ್ರೇರಿತರಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸೆ.26 ರಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಎಎಪಿ, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ರೈತರಿಗಾಗಿ ಹೋರಾಟ ನಡೆಸುತ್ತಿದ್ದು, ಅನ್ಯಾಯ ಮಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಲಾಯಿತು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಇದು ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ನ್ಯಾಯಾಲಯಕ್ಕೂ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಆದೇಶವನ್ನು ಹಿಂಪಡೆಯಬೇಕು. ಪ್ರಾಧಿಕಾರವನ್ನು ರದ್ದುಮಾಡಿ, ಸ್ವತಂತ್ರ ಪ್ರಾಧಿಕಾರವನ್ನು ರಚಿಸಬೇಕು. ಸದನದಲ್ಲಿ ಚರ್ಚೆ ಮಾಡಿ. ಅಲ್ಲಿ ಎಲ್ಲ ಶಾಸಕರು ತಮಿಳುನಾಡಿಗೆ ನೀರು ಬಿಡುವುದು ಸರಿ ಎಂದು ಹೇಳಿದ್ದೇ ಆದರೆ, ಅದನ್ನೂ ಸಾರ್ವಜನಿಕರ ಮುಂದಿಡಿ. ಬೆಳಿಗ್ಗೆಯೇ ಕುರುಬೂರು ಶಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಏಕೆ?. ನಾವು ಜೈಲಿಗೆ ಹೋಗಲು ಕೂಡ ಸಿದ್ಧ” ಎಂದು ಕಿಡಿ ಕಾರಿದರು.
ನೀರು ಬಿಡುವುದಿಲ್ಲ ಎಂಬ ನಿರ್ಣಯ ಕೈಗೊಳ್ಳಿ
“ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ನೀರು ಬಿಡಲ್ಲ ಎನ್ನುವ ಸರ್ಕಾರ, ರಾತ್ರೋರಾತ್ರಿ 5 ಸಾವಿರ ಕ್ಯುಸೆಕ್ ನೀರು ಬಿಟ್ಟು 3.5 ಸಾವಿರ ಕ್ಯುಸೆಕ್ ನೀರು ಬಿಟ್ಟಿರುವುದಾಗಿ ಹೇಳುತ್ತಿದೆ. ರಾಜ್ಯ ಸರ್ಕಾರವೇ ತಮಿಳುನಾಡಿಗೆ ಬೆಂಬಲ ಸೂಚಿಸುವುದರ ಜತೆಗೆ ಕಾನೂನಿನ ಕುಣಿಗೆಗೆ ಹೆದರುತ್ತಿದೆ ಮತ್ತು ತಮ್ಮ ಅಧಿಕಾರದ ಬಗ್ಗೆ ಯೋಚಿಸುತ್ತಿದೆ. ನೀರು ನಮ್ಮ ಹಕ್ಕು. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನೀರು ಬಿಡುವುದಿಲ್ಲ ಎಂಬ ನಿರ್ಧಾರ ತೆಗೆದುಕೊಳ್ಳಿ, ಉಭಯ ಸದನ ಕರೆದು ನೀರು ಬಿಡುವುದಿಲ್ಲ ಎಂದು ನಿರ್ಣಯ ಕೈಗೊಳ್ಳಿ. ಈ ಹೋರಾಟ ರಾಜಕೀಯವಲ್ಲ. ಸಂಕಷ್ಟದ ಸಮಯದಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು ಬಂದ್ | 13 ದೇಶೀಯ ವಿಮಾನ ಹಾರಾಟ ರದ್ದು
ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರದ ವಿರುದ್ಧ ಕಿಡಿ ಕಾರಿದ ಅವರು, “ಪ್ರತಿ ಬಾರಿಯು ಚುನಾವಣೆಯಲ್ಲಿ ಮತದಾರರು ಯೋಗ್ಯರನ್ನು ಆಯ್ಕೆ ಮಾಡಬೇಕಿದೆ. ಸಾರ್ವಜನಿಕರ ಹಿತಕ್ಕೆ ವಿರುದ್ಧವಾಗಿ ಮದ್ಯದಂಗಡಿ ತೆರೆಯಲು ಮುಂದಾಗಿದೆ. ಇದಕ್ಕೆ ನಮ್ಮ ವಿರೋಧವಿದೆ. ಈ ನಿರ್ಧಾರವನ್ನು ಹಿಂಪಡೆಯಬೇಕು ಮತ್ತು ನೀರಿಗಾಗಿ ಹೋರಾಟಲು ಬೀದಿಗೆ ಬರಬೇಕು. ಎಲ್ಲರೊಂದಿಗೆ ಚರ್ಚಿಸಿ ಕರ್ನಾಟಕ ಬಂದ್ ಕುರಿತು ಅಂತಿನ ನಿರ್ಧಾರವನ್ನು ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ತಲೆಯ ಮೇಲೆ ಕಲ್ಲು ಹೊತ್ತಿದ್ದ ಎಎಪಿ ಸಂಘಟನಾ ಕಾರ್ಯದರ್ಶಿ ಮಾತನಾಡಿ, “ರೈತನ ಮಗನಾಗಿ ಹೋರಾಟಕ್ಕೆ ಮುಂದಾಗಿದ್ದೇನೆ. ನಮಗೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹೀಗಿರುವಾಗ, ತಮಿಳುನಾಡಿಗೆ ನೀರು ಬಿಡುತ್ತಿರುವುದು ಸರಿಯಲ್ಲ. ಕೂಡಲೇ ಪ್ರಾಧಿಕಾರವನ್ನು ರದ್ದುಗೊಳಿಸಬೇಕು. ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ಮಾಡಲಾಗುವುದು” ಎಂದರು.