ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಆಗಸ್ಟ್ ಒಂದೇ ತಿಂಗಳಲ್ಲಿ ಬರೋಬ್ಬರಿ 2,374 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಜನವರಿಯಿಂದ ಸೆಪ್ಟೆಂಬರ್ 7ರ ವರೆಗೆ 4,926 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಿಬಿಎಂಪಿ ಅಧಿಕಾರಿಗಳ ಜತೆಗೆ ಗುರುವಾರ ಸಭೆ ನಡೆಸಿದರು. ಈ ವೇಳೆ, ಅಧಿಕಾರಿಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸಲು ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಯುವ ಹಾಗೂ ಇನ್ನಿತರೆ ಆರೋಗ್ಯ ವಿಷಯಕ್ಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, “ನಗರದಲ್ಲಿ ಕಳೆದ 2 ತಿಂಗಳಿನಿಂದ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿವೆ. ಹಾಗಾಗಿ, ಎಲ್ಲ ಕಡೆ ಔಷಧಿ ಸಿಂಪಡಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ರಮೇಣವಾಗಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಬೇಕು” ಎಂದು ತಿಳಿಸಿದರು.
“ನಗರದಲ್ಲಿ ಜುಲೈನಲ್ಲಿ 1,649, ಆಗಸ್ಟ್ನಲ್ಲಿ 1,589, ಸೆಪ್ಟಂಬರ್ನಲ್ಲಿ 416 ಪ್ರಕರಣಗಳು ಪತ್ತೆಯಾಗಿವೆ. ಮುಖ್ಯವಾಗಿ ಮಳೆಯಾಗಿ ನೀರು ನಿಂತ ಕಾರಣ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗಿರುವುದರಿಂದ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಈ ಸಂಬಂಧ ಎಲ್ಲ ಕಡೆ ಔಷಧಿ ಸಿಂಪಡಣೆ ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಬೇಕು. ಅಲ್ಲದೇ, ಎಲ್ಲ ಆರೋಗ್ಯ ವೈದ್ಯಾಧಿಕಾರಿಗಳಿಗೆ ಹೆಚ್ಚು ನಿಗಾ ವಹಿಸಲು ಸೂಚಿಸಲಾಗಿದೆ” ಎಂದು ತಿಳಿಸಿದರು.
“ಪಾಲಿಕೆಯ ವ್ಯಾಪ್ತಿಯಲ್ಲಿ 6 ಹೈಟೆಕ್ ಲ್ಯಾಬ್ಗಳಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಸಂಗ್ರಹ ಮಾಡುವ ಬ್ಲಡ್ ಸ್ಯಾಂಪಲ್ಗಳನ್ನು ಲ್ಯಾಬ್ಗಳಿಗೆ ಕಳುಹಿಸಲು ರವಾನೆ(ಹಬ್ ಅಂಡ್ ಸ್ಪೋಕ್ ಮಾಡಲ್) ಹಾಗೂ ಇನ್ನಿತರೆ ಸೌಲಭ್ಯಗಳ ಅವಶ್ಯಕತೆಯಿದ್ದು, ಅದಕ್ಕೆ ಅನುದಾನ ಬೇಕಾಗಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಾಲಿಕೆ ಸಹಯೋಗದೊಂದಿಗೆ ಎನ್.ಹೆಚ್.ಎಂ ಅನುದಾನದಿಂದ ಒದಗಿಸಲಾಗುವುದು” ಎಂದು ಹೇಳಿದರು.
“ಪಾಲಿಕೆ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರ ಸಂಖ್ಯೆಯನ್ನು ಹೆಚ್ಚಿಸುವ ಜೊತೆಗೆ ಅವರ ವೇತನವನ್ನು ಕೂಡಾ ಕಾರ್ಮಿಕ ಇಲಾಖೆ ಕಾಯ್ದೆ ಕನಿಷ್ಟ ವೇತನ ಹೆಚ್ಚಳ ಮಾಡಬೇಕಿದೆ. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದರು.
“ನಗರದಲ್ಲಿ ಎಲ್ಲ ಆರೋಗ್ಯ ಸೇವೆಗಳನ್ನು ಸಮಾನಾಂತರವಾಗಿ ತರುವ ಉದ್ದೇಶದಿಂದ ಬಿಬಿಎಂಪಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಪರಿಗಣಿಸಲು ನಿರ್ಧಾರ ಮಾಡಲಾಗಿದ್ದು, ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದರು.
ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಅನಾವರಣ
ಡೆಂಗ್ಯೂ ಪ್ರಕರಣಗಳನ್ನು ಒಂದು ತಿಂಗಳ ಮುಂಚಿತವಾಗಿಯೇ ತಿಳಿಯುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಒಂದು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಲಿದೆ. ಕೂಡಲೇ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅನುಕೂಲವಾಗಲಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ನಾನು ಲವ್ ಜಿಹಾದ್ಗೆ ಒಳಗಾಗಿದ್ದೇನೆ ಸಹಾಯ ಮಾಡಿ ಎಂದು ಪೊಲೀಸರಿಗೆ ಟ್ವೀಟ್ ಮಾಡಿದ ಯುವತಿ
ನಮ್ಮ ಕ್ಲಿನಿಕ್ ಸೇವೆ
“ಬಿಬಿಎಂಪಿ ವ್ಯಾಪ್ತಿಯಲ್ಲಿ 50 ನಮ್ಮ ಕ್ಲಿನಿಕ್ಗಳು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಸಮಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಲ್ಯಾಬ್ ಟೆಕ್ನಿಷಿಯನ್ಗಳು ಹಾಗೂ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು, ನರ್ಸ್ಗಳಿರುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ” ಎಂದು ಹೇಳಿದರು.
ಸಭೆಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ, ಎನ್.ಹೆಚ್.ಎಂ ನ ಅಭಿಯಾನ ವೀಕ್ಷಕರಾದ ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಗಳಾದ ಡಾ. ಬಾಲಸುಂದರ್, ಡಾ. ನಿರ್ಮಲಾ ಬುಗ್ಗಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.