ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯವ್ಯಯದಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಕೊಳಗೇರಿ ಪ್ರದೇಶದಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳು ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಕೂಡಲೇ ರೂಪಿಸಬೇಕು ಎಂದು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವತಿಯಿಂದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಕೊಳಗೇರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು” ಎಂದರು.
ನೀರು ನಿಲ್ಲುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ
ಪಾಲಿಕೆ ಎಲ್ಲ ವಲಯದ ಮುಖ್ಯ ಅಭಿಯಂತರರು ತಕ್ಷಣವೇ ಬೃಹತ್ ನೀರುಗಾಲುವೆ ವಿಭಾಗದ ಅಧಿಕಾರಿಗಳ ಜೊತೆ ಸಮನ್ವಯ ನಡೆಸಿ ಪ್ರಮುಖ ನೀರು ನಿಲ್ಲುವ ಸ್ಥಳಗಳನ್ನು ಪರಿಶೀಲಿಸಿ ಸೂಕ್ತ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.
ಸಭೆಯಲ್ಲಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರ್ ಬಾಬು, ವಿಶೇಷ ಆಯುಕ್ತರಾದ ಜಯರಾಮ ರಾಯಪುರ, ಡಾ. ತ್ರಿಲೋಕ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು, ಅಭಿಯಂತರರು, ಬಿಬಿಎಂಪಿ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸುದ್ದಿ ಓದಿದ್ದೀರಾ? ಮಳೆಗಾಲ | ಹೇಳಿಕೆಯಲ್ಲಷ್ಟೇ ಸನ್ನದ್ಧ ಬಿಬಿಎಂಪಿ; ನಗರ ಜೀವನ ಅಸ್ತವ್ಯಸ್ತ
ಪಾಲಿಕೆ ಅಧಿಕಾರಿಗಳು ಮಳೆ ಅವಘಡಗಳನ್ನು ಎದುರಿಸಲು ಸಜ್ಜಾಗಿರಿ
ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮಳೆ ಬೀಳುವ ಮುನ್ಸೂಚನೆ ಇರುವ ಕಾರಣ ಪಾಲಿಕೆಯ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರು ಮಳೆ ಅವಘಡಗಳನ್ನು ಎದುರಿಸಲು ಸಜ್ಜಾಗಿರಬೇಕು.
ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯ ಅಭಿಯಂತರರು ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹೇಳಿದರು.
ಪಾಲಿಕೆಯ ವಿಪತ್ತು ನಿರ್ವಹಣಾ ತಂಡ ದಿನದ 24 ಗಂಟೆಗಳೂ ಸನ್ನದರಾಗಿದ್ದು, ಸಮರೋಪಾದಿಯಲ್ಲಿ ಅತಿವೃಷ್ಟಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಎಂಟು ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ಮುಖ್ಯ ಅಭಿಯಂತರರಿಗೆ ನಿರ್ದೇಶನ ನೀಡಿದರು.