ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗಗಳಲ್ಲಿ 9 ಚೆಕ್ಪೋಸ್ಟ್ ಹಾಗೂ ಮಾರ್ಚ್ 3ರಿಂದ ತೆಲಂಗಾಣ ಗಡಿಯಲ್ಲಿ 4 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದ್ದು, ಅಧಿಕಾರಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ʼಜಿಲ್ಲೆಯಲ್ಲಿ ಈವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣಗಳು ಕಂಡುಬಂದಿಲ್ಲ. ಕೋಳಿ ಫಾರ್ಮ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಎಲ್ಲಾದರೂ ಹಠಾತ್ ಆಗಿ ಕೋಳಿಗಳು ಸಾವನ್ನಪಿದ್ದರೆ ಗಮನಕ್ಕೆ ತರುವಂತೆ ತಿಳಿಸಲಾಗಿದೆʼ ಎಂದರು.
ʼಮಹಾರಾಷ್ಟ್ರದಿಂದ ಕೋಳಿ ಹಾಗೂ ಮೊಟ್ಟೆ ಸಾಗಾಟವಾಗದಂತೆ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಮಾಂಸಾಹಾರ ಪ್ರಿಯರು ಮಾಂಸ ಹಾಗೂ ಮೊಟ್ಟೆಗಳನ್ನು ಹೆಚ್ಚು ಬೇಯಿಸಿ ತಿನ್ನುವಂತೆ ತಿಳಿಸಿದರು. ಸದ್ಯ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕುʼ ಎಂದರು.
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನಿಯಮವಿದ್ದರೂ ಕೆಲ ಆಸ್ಪತ್ರೆಗಳು ರೋಗಿಗಳಿಂದ ಹಣ ಪಡೆಯುತ್ತಿರುವ ಪ್ರಕರಣಗಳ ಬಗ್ಗೆ ಜಿಲ್ಲಾ ಆರೋಗ್ಯ ಕುಟುಂಬ ಅಧಿಕಾರಿ ಡಾ. ಜ್ಞಾನೇಶ್ವರ ನಿರಗುಡೆ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ರೋಗಿಗಳಿಂದ ಹಣ ಪಡೆದ ಆಸ್ಪತ್ರೆಗಳು ಆ ಹಣವನ್ನು ರೋಗಿಗಳಿಗೆ ವಾಪಸ್ ಸಂದಾಯ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಕುಂಭಮೇಳಕ್ಕೆ ತೆರಳಿದ ವೇಳೆ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು
ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.