ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹಾಗೂ ಎಂಎಲ್ಸಿ ಎನ್.ರವಿಕುಮಾರ್ ಅವರು ಕಲಬುರ್ಗಿ ಜಿಲ್ಲಾಧಿಕಾರಿಗಳ ವಿರುದ್ಧ ನೀಡಿದ ಕೀಳುಮಟ್ಟದ ಹಾಗೂ ಅಸಂವಿಧಾನಾತ್ಮಕ ಹೇಳಿಕೆಗಳನ್ನು ಖಂಡಿಸಿ ಸೋಮವಾರ ಬೀದರ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಸಂಸದ ಸಾಗರ್ ಖಂಡ್ರೆ ನೇತೃತ್ವದಲ್ಲಿ ಜಮಾಯಿಸಿದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ಬಿಜೆಪಿ ಹಾಗೂ ಎಂಎಲ್ಸಿಗಳಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ವಿರುದ್ಧ ಘೋಷಣೆ ಕೂಗಿದರು.
ಸಂಸದ ಸಾಗರ್ ಖಂಡ್ರೆ ಮಾತನಾಡಿ, ʼಜವಾಬ್ದಾರಿ ಸ್ಥಾನದಲ್ಲಿರುವ ಪ್ರತಿಪಕ್ಷ ನಾಯಕರಿಂದ ಈ ರೀತಿಯ ವೈಯಕ್ತಿಕ ಟೀಕೆಗಳು ಹಾಗೂ ಅಸಂವಿಧಾನಾತ್ಮಕ ಪದಗಳ ಬಳಕೆ ಶೋಭೆ ತರುವುದಲ್ಲ. ಸರ್ಕಾರ ತಪ್ಪು ಮಾಡಿದರೆ, ಆ ತಪ್ಪುಗಳನ್ನು ಚರ್ಚೆಗೆ ತರಬೇಕು, ಸರಿದಾರಿಗೆ ತರಬೇಕು ಅದು ಪ್ರತಿಪಕ್ಷದ ಪ್ರಮುಖ ಹೊಣೆಗಾರಿಕೆ. ಆದರೆ ವೈಯಕ್ತಿಕ ನಿಂದನೆ ಮಾಡುವ ಪ್ರವೃತ್ತಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆʼ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮುಖಂಡರಾದ ಭೀಮಸೇನರಾವ್ ಸಿಂಧೆ ಮಾತನಾಡಿ, ʼಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗರಡಿಯಲ್ಲಿ ಬೆಳೆದ ನಾರಾಯಣಸ್ವಾಮಿ ಅವರು ಈಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಈ ರೀತಿ ವೈಯಕ್ತಿಕ ಟೀಕೆ ಮಾಡುವುದು ಖಂಡನೀಯವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕುʼ ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಮಾಜಿ ಎಂಎಲ್ಸಿ ಅರವಿಂದಕುಮಾರ್ ಅರಳಿ ಸೇರಿದಂತೆ ಪ್ರಮುಖರಾದ ಅಭಿಷೇಕ ಪಾಟೀಲ್, ಸಚಿನ್ ಮಲ್ಕಾಪುರೆ, ಗೀತಾ ಪಂಡಿತ ಚಿದ್ರಿ, ರಾಜಶ್ರೀ ಶ್ರೀಕಾಂತ್ ಸ್ವಾಮಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.