ಬೀದರ ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯ ಜನರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಲು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
“ಜಿಲ್ಲೆಯಲ್ಲಿ 42 ಡಿಗ್ರಿ ಸೆಲ್ಸಿಯಸ್ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಇದು ಹೀಗೆ ಇನ್ನೂ ಮುಂದುವರೆಯಲಿದ್ದು, ಜನರು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆ ತನಕ ಹೆಚ್ಚಾಗಿ ಹೊರಗಡೆ ತಿರುಗಾಡಬಾರದು. ಹೊರಗಡೆ ಹೋಗುವಾಗ ತೆಳುವಾದ ಬಟ್ಟೆ ಹಾಗೂ ಚಪ್ಪಲಿ ಧರಿಸಿಕೊಂಡು ಹೋಗಬೇಕು. ತಂಪಾದ ಹಣ್ಣಿನ ರಸ, ಮಜ್ಜಿಗೆ ಹಾಗೂ ಎಳೆನೀರು ಹೆಚ್ಚಾಗಿ ಸೇವಿಸಬೇಕು” ಎಂದು ಸಲಹೆ ನೀಡಿದರು.
“ತಾಪಮಾನ ಹೆಚ್ಚಾಗಿರುವ ಕುರಿತು ಜಿಲ್ಲೆಯ ಎಲ್ಲಾ ತಾಲೂಕಿನ ತಹಶಿಲ್ದಾರರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತು ನಗರಸಭೆ, ಪುರಸಭೆ, ಗ್ರಾಮ ಪಂಚಾಯತ್ ಮುಖಾಂತರ ಹೆಚ್ಚಿನ ಪ್ರಚಾರ ನೀಡುವ ಮೂಲಕ ಈ ಮಾಹಿತಿಯನ್ನು ಜನರಿಗೆ ತಲುಪಿಸಬೇಕು ಅಂದಾಗ ಜನರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ” ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ಜನನಿಬಿಡ ಪ್ರದೇಶಗಳಾದ ಮಾರುಕಟ್ಟೆ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದಂತಹ ಸಾರ್ವಜನಿಕ ಸ್ಥಳಗಳಲ್ಲಿ ನಗರ, ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಮಾಡಬೇಕು. ಧಾರ್ಮಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಆಯಾ ದೇವಾಲಯಗಳ ಮುಖ್ಯಸ್ಥರಿಗೆ ತಿಳಿಸಬೇಕು. ಕಟ್ಟಡ ಕಾರ್ಮಿಕರು ಹೆಚ್ಚಿನ ಬಿಸಿಲಿರುವ ಸಂದರ್ಭದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಕೆಲಸ ಮಾಡಬಾರದು. ಈ ಕುರಿತು ಕಾರ್ಮಿಕ ಅಧಿಕಾರಿಗಳು ಅವರಿಗೆ ಮಾಹಿತಿ ನೀಡಬೇಕು” ಎಂದು ಹೇಳಿದರು.
“ಕಳೆದ ವರ್ಷ 38 ಮತ್ತು 39 ಡಿಗ್ರಿ ತಾಪಮಾನ ದಾಖಲಾಗಿತ್ತು, ಈ ವರ್ಷ ಸೆಪ್ಟೆಂಬರ್ನಲ್ಲಿ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ. ಜನರು ಟೀ, ಕಾಫಿ ಹಾಗೂ ಮಧ್ಯಪಾನದಿಂದ ದೂರವಿರಬೇಕು. ಸಾಕುಪ್ರಾಣಿಗಳಿಗೆ ಸಾಕಷ್ಟು ನೀರು ಇಡಬೇಕು. ಸುಸ್ತು, ವಾಂತಿ, ಬೆವರು ಇತರೆ ಯಾವುದೇ ಲಕ್ಷಣ ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಿ” ಎಂದು ಹೇಳಿದರು.
“ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಓಆರ್ಎಸ್ ಪಾಕೇಟಗಳು ಹೆಚ್ಚಾಗಿ ಇಡಬೇಕು. ವೈದ್ಯರು ತಮ್ಮ ಕರ್ತವ್ಯ ಸಮಯದಲ್ಲಿ ಆಸ್ಪತ್ರೆಯಲ್ಲಿದ್ದು, ಜನರಿಗೆ ಯಾವುದೇ ತೊಂದರೆಯಾಗದಂತೆ ಸೇವೆ ನೀಡಬೇಕು. ಬಿಸಿಲು ಹೆಚ್ಚಾದಾಗ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ, ಹಾಗಾಗಿ ಯಾವುದೇ ಸಂದರ್ಭದಲ್ಲಿ ಅಗ್ನಿಶಾಮಕ ವಾಹನಗಳು ಸಿದ್ಧತೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು” ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಮಾತನಾಡಿ, “ಮೇ- ಜೂನ್ ವರೆಗೆ ಬಿಸಿಲು ಹೆಚ್ಚಾಗಿ ಇರುವುದರಿಂದ ಜನರು ಅನಗತ್ಯವಾಗಿ ಓಡಾಡಬಾರದು. ಜನರು ಹೊಲಗಳಿಗೆ ಹೋಗುವಾಗ ಜೊತೆಯಲ್ಲಿ ನೀರು ತೆಗೆದುಕೊಂಡು ಹೋಗಬೇಕು. ಉತ್ತಮ ಗಾಳಿ, ಬೆಳಕು ಇರುವ ಮನೆಗಳಲ್ಲಿ ಇರಬೇಕು. ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಆಸ್ಪತ್ರೆಗಳಲ್ಲಿದ್ದು, ಎಲ್ಲಾ ಔಷಧಿ ಹಾಗೂ ಓ.ಆರ್.ಎಸ್. ಪಾಕೇಟಗಳನ್ನು ಆಸ್ಪತ್ರೆಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು” ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಮಾತನಾಡಿ, “ಎಲ್ಲಾ ಆಸ್ಪತ್ರೆಗಳಲ್ಲಿ ಓ.ಆರ್.ಎಸ್. ಲಭ್ಯವಿದೆ, ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಇದಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಡಿ ಹೈಡ್ರೆಟ್ನಿಂದ ಬಳಲುತ್ತಿರುವ ಯಾವುದೇ ಒಂದು ಕೇಸ್ ದಾಖಲಾದರೆ ತಕ್ಷಣ ನಮ್ಮ ಗಮನಕ್ಕೆ ತರಬೇಕು” ಎಂದು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಮೈತ್ರಿ ಅಭ್ಯರ್ಥಿ ಭಗವಂತ ಖೂಬಾ ಗೆಲುವಿಗೆ ಶತಪ್ರಯತ್ನ ಮಾಡೋಣ : ಬಂಡೆಪ್ಪ ಕಾಶೆಂಪುರ್
ಸಭೆಯಲ್ಲಿ ಬೀದರ ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಉಪನಿರ್ದೆಶಕ ಪ್ರಭಾಕರ್, ಬೀದರ ನಗರ ಸಭೆ ಆಯುಕ್ತ ಶಿವರಾಜ ರಾಠೋಡ, ಅಗ್ನಿಶಾಮಕ ದಳದ ಅಧಿಕಾರಿ ರವೀಂದ್ರ ಘಾಟಗೆ, ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ತಹಶಿಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸಭೆ ಹಾಗೂ ಪುರಸಭೆ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.