ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಘಟಕದಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಈಚೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಹಾಗೂ ಅಭಿನಂದನಾ ಸಮಾರಂಭ ನಡೆಯಿತು.
ಉದ್ಘಾಟನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿ, ʼಡಾ. ಬಿ.ಆರ್ ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಬಾಬಾ ಸಾಹೇಬರು ಅವರು ಎಲ್ಲ ಜಾತಿ, ವರ್ಗಗಳ ಜನರ ಕಲ್ಯಾಣಕ್ಕೆ ಶ್ರಮಿಸಿದ್ದರು. ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಅವರ ಪಾತ್ರ ಬಹಳ ಮಹತ್ವದ್ದಾಗಿದೆʼ ಎಂದರು.
ಒಕ್ಕೂಟದ ಜಿಲ್ಲಾ ಘಟಕದ ಉಪಾಧ್ಯಕ್ಷ ತಾನಾಜಿ ಸಗರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಇಂದು ಒಕ್ಕೂಟದಿಂದ ಬಾಬಾ ಸಾಹೇಬರ ಜಯಂತಿ ಆಯೋಜಿಸಲಾಗಿದ್ದು,ಮುಂದಿನ ದಿನಗಳಲ್ಲಿ ಎಲ್ಲ ಶರಣರ ಜಯಂತಿಗಳನ್ನು ಆಚರಿಸಲು ಉದ್ದೇಶಿಸಲಾಗಿದೆʼ ಎಂದರು.
ವಿದ್ಯೆ ದಾಸೋಹಗೈದು ಸಾವಿರಾರು ವಿದ್ಯಾರ್ಥಿಗಳ ಬಾಳು ಬೆಳಗಿದ ನಿವೃತ್ತ ಶಿಕ್ಷಕಿ ಶಶಿಕಲಾ ಮಾಳಗೆ, ವೈದ್ಯರಾಗಿ 25 ವರ್ಷ ಸಾರ್ಥಕ ಸೇವೆ ಸಲ್ಲಿಸಿ, 50 ಸಾವಿರ ಶಸ್ತ್ರಚಿಕಿತ್ಸೆ, ಅಪಘಾತ ಪ್ರಕರಣಗಳಲ್ಲಿ 1 ಲಕ್ಷ ಜನರ ಜೀವ ಉಳಿಸಿದ, ಮನ್ನಾಎಖ್ಖೆಳ್ಳಿಯಲ್ಲಿ ಶಾಖೆ ತೆರೆದು ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿರುವ ಡಾ.ರಾಜಶೇಖರ ಸೇಡಂಕರ್ ಹಾಗೂ ರಾಜ್ಯ ಸರ್ಕಾರದ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಬಾಬುರಾವ್ ಕುಂಬಾರ ಅವರನ್ನು ಅಭಿನಂದಿಸಲಾಯಿತು.
ಪೌರಾಡಳಿತ ಹಾಗೂ ಹಜ್ ಸಚಿವ್ ರಹೀಂಖಾನ್, ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರದಾರ್, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ ಮಾಳಗೆ, ಸಂವಿಧಾನ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಮಹಾ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ಬೆಲ್ದಾರ್, ಒಕ್ಕೂಟದ ಕಲಬುರಗಿ ಘಟಕದ ಅಧ್ಯಕ್ಷ ಮಹಾಂತೇಶ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ, ಜನವಾದಿ ಮಹಿಳಾ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ಗಡ್ಡೆ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ನಾಥ ತಡಪಳ್ಳಿ, ಖಜಾಂಚಿ ಸಂಗಯ್ಯ ಸುಲ್ತಾನಪುರೆ, ಹಿರಿಯ ಮುಖಂಡ ಶಾಮರಾವ್ ಮೋರ್ಗಿಕರ್ ಮತ್ತಿತರರು ಇದ್ದರು.