ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ವಾರಂಟ್ ಜಾರಿಗೆ ಆದೇಶಿಸಿದೆ.
ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ₹1 ಲಕ್ಷ ಭದ್ರತೆಯ ಜಾಮೀನು ಸಹಿತ ವಾರಂಟ್ ಜಾರಿಗೊಳಿಸಲು ಆದೇಶ ಹೊರಡಿಸಿದೆ.
ಪ್ರಕರಣದ ವಿವರ: ಔರಾದ್ ಶಾಸಕ ಪ್ರಭು ಚವ್ಹಾಣ ಅವರು ನಕಲಿ ದಾಖಲೆ ಸೃಷ್ಟಿಸಿ ಬೀದರ್ ತಾಲ್ಲೂಕಿನ ಕೊಳಾರ(ಬಿ) ಗ್ರಾಮದ ಸರ್ವೇ ಸಂಖ್ಯೆ 102 ರಲ್ಲಿರುವ 3 ಎಕರೆ 19 ಗುಂಟೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಔರಾದ್ ತಾಲ್ಲೂಕಿನ ಚಾಂದೋರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೀಪಕ್ ಪಾಟೀಲ ಚಾಂದೋರಿ ಅವರು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಶಾಸಕ ಚವ್ಹಾಣ ಜತೆಗೆ ಬೀದರ್ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್, ಭೂ ದಾಖಲೆಗಳ ಹೆಚ್ಚುವರಿ ನಿರ್ದೇಶಕ ಹಾಗೂ ಬೀದರ್ ಸಬ್ ರಿಜಿಸ್ಟ್ರಾರ್ ಅವರ ಮೇಲೂ ಖಟ್ಲೆ ಹೂಡಿದ್ದರು.ಬೀದರ್ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಒತ್ತುವರಿಗೆ ಸಹಕಾರ ನೀಡಿದ್ದಾರೆ ಎಂದು ಆರೋಪಿಸಿದ್ದರು.
ಜಮೀನು ಕಬಳಿಕೆ ಮಾಡಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಜಮೀನು ಮರಳಿ ಸರ್ಕಾರದ ಸುಪರ್ದಿಗೆ ಪಡೆಯಬೇಕು ಎಂದು ಮನವಿ ಮಾಡಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ 2024ರ ಅಕ್ಟೋಬರ್ 5 ರಂದು ದೀಪಕ್ ಪಾಟೀಲ ಚಾಂದೋರಿ ಅವರ ಹೇಳಿಕೆ ಪಡೆದಿತ್ತು.
2024ರ ಡಿಸೆಂಬರ್ 12ರ ಒಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಆದೇಶಿಸಿತ್ತು. ಬಳಿಕ ವರದಿ ಸಲ್ಲಿಕೆಗೆ 2025ರ ಫೆಬ್ರುವರಿ 21ರವರೆಗೆ ಕಾಲಾವಕಾಶ ನೀಡಿತ್ತು. ನಂತರ ಮಾರ್ಚ್ 13 ರ ವರೆಗೆ ಕಾಲಾವಕಾಶ ಕೊಟ್ಟಿತ್ತು. ಯಾವಾಗಲೂ ಜಿಲ್ಲಾಡಳಿತ ವರದಿ ಸಲ್ಲಿಸಿರಲಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗೆ ಜಾಮೀನು ಸಹಿತ ವಾರಂಟ್ ಜಾರಿಗೊಳಿಸಲು ಆದೇಶಿಸಿದೆ.
‘ರಾಜಕೀಯ ಪ್ರಭಾವಕ್ಕೆ ಮಣಿದು ವರದಿ ಸಲ್ಲಿಸಿಲ್ಲ. ಶಾಸಕ ಪ್ರಭು ಚವ್ಹಾಣ ಅವರ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದಲ್ಲಿ ಜಿಲ್ಲಾಡಳಿತ ರಾಜಕೀಯ ಪ್ರಭಾವಕ್ಕೆ ಮಣಿದು ವರದಿ ಸಲ್ಲಿಸಿಲ್ಲ’ ಎಂದು ಪ್ರಕರಣದ ದೂರುದಾರ ದೀಪಕ್ ಪಾಟೀಲ ಚಾಂದೋರಿ ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಿಲ್ಲದ ರೈತರ ಆತ್ಮಹತ್ಯೆ : 2 ವರ್ಷದಲ್ಲಿ 100 ಅನ್ನದಾತರ ಸಾವು
‘ನಾನು ಪ್ರಕರಣ ದಾಖಲಿಸಿದ್ದು ಸರ್ಕಾರದ ಆಸ್ತಿ ಉಳಿಸುವುದಕ್ಕಾಗಿಯೇ ಹೊರತು ವೈಯಕ್ತಿಕ ಲಾಭಕ್ಕಾಗಿ ಅಲ್ಲ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಚ್.ಆರ್.ಮಹಾದೇವ ಅವರು ಜಮೀನು ಸರ್ಕಾರಕ್ಕೆ ಸೇರಿದ್ದು ಎಂದು ಆದೇಶ ಹೊರಡಿಸಿದ್ದರು. ಆದರೆ, ಅನಂತರ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಅನಿವಾರ್ಯವಾಗಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಮೊರೆ ಹೋಗಬೇಕಾಯಿತು’ ಎಂದು ಪರಕಟಣೆಯಲ್ಲಿ ತಿಳಿಸಿದ್ದಾರೆ.