ʼಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವ ಸಂವಿಧಾನ ಜೀವಾಳʼ ಎಂಬ ಸಂಕಲ್ಪದೊಂದಿಗೆ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಆಚರಿಸಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಚಾಲನೆ ನೀಡಿದರು.
ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಮೂಲಭೂತ ತತ್ವಗಳನ್ನು ಪ್ರತಿನಿಧಿಸಲು, ಬೀದರ್ನಿಂದ ಚಾಮರಾಜನಗರದವರೆಗೆ 2,500 ಕಿಮೀಗಳ ಐತಿಹಾಸಿಕ ಮಾನವ ಸರಪಳಿಯನ್ನು ನಿರ್ಮಿಸಲಾಯಿತು. ಜನಸಾಮಾನ್ಯರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಸೇರಿದಂತೆ ಅನೇಕರು ಈ ಸರಪಳಿಯಲ್ಲಿ ಭಾಗವಹಿಸಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಇದರ ಜತೆಗೆ, ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಅರಣ್ಯ ಇಲಾಖೆಯ ಸಹಕಾರದೊಂದಿಗೆ ರಾಜ್ಯಾದ್ಯಂತ ಸುಮಾರು 10 ಲಕ್ಷ ಸಸಿಗಳನ್ನು ನೆಡುವ ಅಭಿಯಾನವು ಯಶಸ್ವಿಯಾಗಿ ನಡೆಯಿತು.
ಪ್ರಜಾಪ್ರಭುತ್ವದ ಮೌಲ್ಯಗಳ ಮಹತ್ವವನ್ನು ಸಾರಲು ಮತ್ತು ಸಮಾಜದಲ್ಲಿ ಬದಲಾವಣೆಯನ್ನು ತರಲು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕೈಜೋಡಿಸಿದ ಉತ್ಸಾಹದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಈ ಸುದ್ದಿ ಓದಿದ್ದೀರಾ? ಹಾಸನ | ಎತ್ತಿನಹೊಳೆ ಯೋಜನೆಯಿಂದ ರೈತರ ಜಮೀನಿಗೆ ಹಾನಿ
ಪೌರಾಡಳಿತ ಸಚಿವ ರಹೀಂ ಖಾನ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ. ಸಿಇಒ ಡಾ.ಗಿರೀಶ ಬದೋಲೆ, ಎಸ್ಪಿ ಪ್ರದೀಪ ಗುಂಟಿ, ಡಿಎಫ್ಓ ಎಂ.ವಾನತಿ, ವಿಧಾನ ಪರಿಷತ್ ಸದಸ್ಯ ಎಂ ಜಿ ಮುಳೆ, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಶಾಲೆ-ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು , ಶಿಕ್ಷಕರು, ಸಂಘ ಸಂಸ್ಥೆಗಳು, ಸಾಮಾಜಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.