ಬೀದರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ಏರ್ಪಡಿಸಿರುವ ರಾಜ್ಯ ಸರ್ಕಾರದ 2 ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರೊಂದಿಗೆ ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೊಡೆ ಮಾತನಾಡಿ, ʼಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗಿದೆʼ ಎಂದು ಹೇಳಿದರು.
ʼರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಪಂಚ ಗ್ಯಾರಂಟಿ ಯೋಜನೆಗಳಿಂದ ವಿಶೇಷವಾಗಿ ಕಡುಬಡವರು, ಕೂಲಿ ಕಾರ್ಮಿಕರ ಆರ್ಥಿಕ ಬಲವರ್ಧನೆಗೆ ಸಾಕಷ್ಟು ಅನುಕೂಲವಾಗಿದೆʼ ಎಂದರು.
ʼಉಚಿತ ಬಸ್ ಪ್ರಯಾಣದಿಂದ ಮಹಿಳೆಯರು ಧಾರ್ಮಿಕ ಸ್ಥಳಗಳಿಗೆ ಮತ್ತು ಪ್ರವಾಸಿತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಮಹಿಳೆಯರಿಗೆ ಕುಟುಂಬ ನಿರ್ವಹಣೆ ತುಂಬಾ ಅನುಕೂಲವಾಗಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಾಕಷ್ಟು ಅಭಿವೃದ್ಧಿ ಕಂಡಿದೆʼ ಎಂದು ಹೇಳಿದರು.

2023ರ ಜೂನ್ 11ರಿಂದ 2025ರ ಜುಲೈ 9ರವರೆಗೆ ಜಿಲ್ಲೆಯಲ್ಲಿ ಒಟ್ಟು 8 ಕೋಟಿ 64 ಲಕ್ಷ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ. ಇದರಿಂದ 248 ಕೋಟಿ 79 ಲಕ್ಷ ಮೊತ್ತವನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮೊತ್ತ ಸಂದಾಯವಾಗಿದೆ.
2025ರ ಜನವರಿವರೆಗೆ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿ ವಿತರಿಸಲಾಗಿದ್ದು, 5 ಕೆ.ಜಿ. ಮೊತ್ತವನ್ನು ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. 2025 ಫೆಬ್ರುವರಿ ತಿಂಗಳಿಂದ ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ.
ಯುವನಿಧಿ ಯೋಜನೆ ಅಡಿಯಲ್ಲಿ ಜಿಲ್ಲೆಯ ಡಿಪ್ಲೋಮಾ ಹಾಗೂ ಪದವೀದರ ನಿರುದ್ಯೋಗ ಯುವಕರಿಗೆ ಇಲ್ಲಿಯವರೆಗೆ 20 ಕೋಟಿ 97 ಲಕ್ಷ ಹಣ ಪಾವತಿಸಲಾಗಿದೆ. ಪ್ರತಿ ಮನೆಗೆ 200 ಯುನಿಟವರೆಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 35 ಲಕ್ಷ 4 ಸಾವಿರದ 79 ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದು ಒಟ್ಟು 341 ಕೋಟಿ 46 ಲಕ್ಷ ಹಣ ಜೆಸ್ಕಾಂಗೆ ಸಂದಾಯವಾಗಿದೆ.
ಜಿಲ್ಲೆಯಲ್ಲಿ 3 ಲಕ್ಷ 60 ಸಾವಿರ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು ಮೇ 2025 ಅಂತ್ಯದವರೆಗೆ 1,268 ಕೋಟಿ ಹಣವನ್ನು ಡಿಬಿಟಿ ಮುಖಾಂತರ ಫಲಾನುಭವಿಗಳ ಖಾತೆಗೆ ಹಣ ನೇರ ವರ್ಗಾವಣೆ ಮಾಡಲಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಯ ಮಾಹಿತಿ ವಿವರಿಸಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ʼರಾಜ್ಯ ಸರ್ಕಾರವು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿ ಅವುಗಳು ಮಾಹಿತಿ ಪಡೆಯಬಹುದುʼ ಎಂದರು.
ಗಮನ ಸೆಳೆಯುವ ಸಿದ್ದರಾಮಯ್ಯ ಸೆಲ್ಫಿ ಪಾಯಿಂಟ್ :
ವಸ್ತು ಪ್ರದರ್ಶನ ಮಳಿಗೆಯಲ್ಲಿ ಗ್ಯಾರಂಟಿಯ ಸಮರ್ಪಣೆ ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು ಫಲಕ, ಐದು ಗ್ಯಾರಂಟಿ ಯೋಜನೆಗಳ ವಿವರಗಳ ಫಲಕಗಳಿವೆ.

ಈ ವಸ್ತು ಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಪಂಚ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆ ಒಳಗೊಂಡ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾದರಿ ಪ್ರತಿಕೃತಿಯಿಂದ ಪಡೆಯುವಂತೆ ಸೆಲ್ಫಿ ಪಾಯಿಂಟ್ ನೋಡುಗರ ಗಮನ ಸೆಳೆಯುತ್ತಿದೆ.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತ ಚಿಮಕೋಡೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಮತ್ತಿತರರು ಸೆಲ್ಫಿ ಪಾಯಿಂಟ್ಗಳಲ್ಲಿ ತೆಗೆದುಕೊಂಡರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಬಸ್ ನಿಲ್ದಾಣದಲ್ಲಿ ನಿರ್ಮಿಸಿದ ಹೆಣ್ಣು ಮಕ್ಕಳ ವಿಶ್ರಾಂತಿ ಕೋಣೆ ಹಾಗೂ ಮಗುವಿಗೆ ಹಾಲುಣಿಸುವ ಕೋಣೆ ಉದ್ಘಾಟಿಸಿದರು.
ಇದನ್ನೂ ಓದಿ : ಬಸವಕಲ್ಯಾಣ | ಅಪಘಾತದಲ್ಲಿ ಓರ್ವ ಸಾವು; ಗಾಯಗೊಂಡಿದ್ದ ವ್ಯಕ್ತಿಯನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದ ಸಿಪಿಐ
ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ, ವಿಭಾಗೀಯ ಸಂಚಾರಿ ಅಧಿಕಾರಿ ಇಂದ್ರಸೇನ ಎಂ.ಬಿರಾದಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರವೀಣ ಬರಗಲ, ಜೆಸ್ಕಾಂ ಕಾರ್ಯಪಾಲಕ ಅಭಿಯಂತರರಾದ ರಮೇಶ ಪಾಟೀಲ, ಉದ್ಯೋಗ ವಿನಿಮಿಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ವಿಜಯಕೃಷ್ಣ ಸೋಲಪೂರ, ನರೇಶಕುಮಾರ, ಆಶೀಷ, ತನ್ವೀರ ಇಕ್ಬಾಲ್, ನಾಗಶೆಟ್ಟಿ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.