ಪ್ರವಾಸೋದ್ಯಮ ಇಲಾಖೆಯ ‘ಸ್ವದೇಶ ದರ್ಶನ್ 2.0’ ಯೋಜನೆಯ ‘ಚಾಲೆಂಜ್ ಬೇಸ್ಡ್ ಡೆಸ್ಟಿನೇಷನ್ ಡೆವಲಪ್ಮೆಂಟ್’ ಅಡಿಯಲ್ಲಿ ₹25 ಕೋಟಿ ವೆಚ್ಚದಲ್ಲಿ ಬೀದರ್ ನಗರದ ಐತಿಹಾಸಿಕ ಬೀದರ್ ಕೋಟೆ ಹಾಗೂ ಪಾಪನಾಶಿನಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಇದರಿಂದ ಜಿಲ್ಲೆಯ ಆರ್ಥಿಕತೆಗೆ ದೊಡ್ಡ ಮಟ್ಟದ ಉತ್ತೇಜನ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಗುರುವಾರ ನಗರದ ಕೋಟೆ ಆವರಣದಲ್ಲಿ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ, ಭಾರತ ಸರ್ಕಾರ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಸ್ವದೇಶ ದರ್ಶನ್ 2.0’ ಯೋಜನೆಯಡಿ ಬೀದರ್ ಕೋಟೆ ಮತ್ತು ಪಾಪನಾಶ ಕೆರೆ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಬೀದರ್ ಕೋಟೆ ಹಾಗೂ ಪಾಪನಾಶ ದೇವಾಲಯವು ಅಪಾರ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವ ಹೊಂದಿವೆ. ಈ ಪಾರಂಪರಿಕ ತಾಣಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಕೋಟೆ ಅಭಿವೃದ್ಧಿಯಿಂದ ಹೊರರಾಜ್ಯಗಳ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದ್ದು, ಸ್ಥಳೀಯ ಯುವಕರಿಗೆ ಪ್ರವಾಸಿ ಮಾರ್ಗದರ್ಶಕರ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಇದರೊಂದಿಗೆ ಹೋಟೆಲ್, ಸಾರಿಗೆ ಹಾಗೂ ಸ್ಥಳೀಯ ವ್ಯಾಪಾರ-ವಹಿವಾಟು ವೃದ್ಧಿಯಾಗಿ ಜಿಲ್ಲೆಯ ಆರ್ಥಿಕತೆ ಮತ್ತಷ್ಟು ಬಲಗೊಳ್ಳಲಿದೆ” ಎಂದರು.
ಲೋಕಸಭಾ ಸದಸ್ಯ ಸಾಗರ ಈ.ಖಂಡ್ರೆ ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಪ್ರವಾಸಿ ತಾಣಗಳ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಲು ಆದ್ಯತೆ ನೀಡಲಾಗುತ್ತಿದೆ. ಯೋಜನೆಯಡಿ ಕೋಟೆ ಆವರಣದಲ್ಲಿ ಹಿರಿಯ ನಾಗರಿಕರಿಗಾಗಿ ಇವಿ ಬಗ್ಗಿ ಶಟಲ್ ಸೇವೆ, ಹೆರಿಟೇಜ್ ವಾಕ್, ಪ್ರವಾಸಿ ಮಾಹಿತಿ ಕೇಂದ್ರ, ಆಕರ್ಷಕ ದೀಪಾಲಂಕಾರ, ಸೈಕಲ್ ಟ್ರ್ಯಾಕ್ ಹಾಗೂ ಫಾರೆಸ್ಟ್ ಟ್ರೇಲ್ ನಿರ್ಮಿಸಲಾಗುವುದು” ಎಂದು ತಿಳಿಸಿದರು.
“ಪಾಪನಾಶ ಕೆರೆ ಆವರಣದಲ್ಲಿ ಪ್ರವೇಶ ದ್ವಾರ, ಜಿಪ್ಲೈನ್, ರೋಪ್ ಕೋರ್ಸ್, ಬೋಟಿಂಗ್ ಜಟ್ಟಿ ಹಾಗೂ ಮಕ್ಕಳ ಆಟದ ಮೈದಾನ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ವೆಬ್ಸೈಟ್ ಹಾಗೂ ಡಿಜಿಟಲ್ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗುವುದು” ಎಂದು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಮಾತನಾಡಿ, “ಕೋಟೆ ಹಾಗೂ ಚೌಖಂಡಿಯಂತಹ ಸ್ಮಾರಕಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಮರ್ಥ್ಯ ಹೊಂದಿವೆ. ಬಿಡುಗಡೆಯಾದ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, “‘ಪ್ರಸಾದ್-2’ ಯೋಜನೆಯಡಿ ಪಾಪನಾಶ ದೇವಾಲಯದ ಅಭಿವೃದ್ಧಿಗೆ ಅನುದಾನ ದೊರೆತಿದ್ದು, ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿಯೂ ಇಕೋ ಟೂರಿಸಂಗೆ ಉತ್ತೇಜನ ನೀಡಲಾಗುತ್ತಿದೆ” ಎಂದು ಹೇಳಿದರು.
ಇದನ್ನೂ ಓದಿ : ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!
ಕಾರ್ಯಕ್ರಮದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಅಪ್ಪೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ್ ವಿಠಲರಾವ್, ಬೀದರ್ ಸಹಾಯಕ ಆಯುಕ್ತ ಅಭಿನವ್ ಜೈನ್, ಮಹಾನಗರ ಪಾಲಿಕೆ ಸದಸ್ಯ ಇರ್ಶಾದ್ ಪೈಲ್ವಾನ್ ಸೇರಿದಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.




