ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 11 ರಂದು ಜಿಲ್ಲೆಯಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಜುಲೈ 18 ರಂದು ಮಧ್ಯಾಹ್ನ 2:30ಕ್ಕೆ ಎನ್ಐ ಆಕ್ಟ್ ಪ್ರಕರಣಗಳ ಕುರಿತು ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಬಿ.ರಹಮಾನ ಹೇಳಿದರು.
ಬೀದರ್ ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
“ಈ ಬೃಹತ್ ಲೋಕ ಅದಾಲತನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣಗಳು ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ” ಎಂದರು.
“2026ರ ಮಾರ್ಚ್ 14ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಜಿಲ್ಲೆಯಾದ್ಯಂತ 66,440 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಈ ಪೈಕಿ 11,869 ನ್ಯಾಯಾಲಯದಲ್ಲಿನ ಪೆಂಡಿಂಗ್ ಪ್ರಕರಣಗಳು, 54,571 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿವೆ” ಎಂದರು
“ಈ ಬಾರಿ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯಾರ್ಥಗೊಳಿಸಲು ಯೋಜನೆ ರೂಪಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 30,499 ಪ್ರಕರಣಗಳು ಪೆಂಡಿಂಗ್ ಇದ್ದು ಅದರಲ್ಲಿ ಸಂಧಾನಕ್ಕಾಗಿ 1,780 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇನ್ನು ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದು, ಇದಕ್ಕಾಗಿ ಎಲ್ಲ ಪೂರ್ವ ತಯ್ಯಾರಿ ಮಾಡಿಕೊಂಡಿದ್ದೇವೆ” ಎಂದರು.
“ಲೋಕ ಅದಾಲತ್ನಲ್ಲಿ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ್ ಸಿಗಲಿದೆ. ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆ” ಎಂದು ತಿಳಿಸಿದರು.
“ಸಾರಿಗೆ ಇಲಾಖೆಯಲ್ಲಿ 1991ರಿಂದ 2022 ರ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ದಂಡದ ಮೊತ್ತದ ಮೇಲೆ ಶೇ 50ರಷ್ಟು ವಿನಾಯಿತಿ ನೀಡಲಾಗಿದೆ. ಸಾರ್ವಜನಿಕರಲ್ಲಿ ಮನವಿ ತಾವು ಜೂ.26 ರಿಂದ ಜೂ.10ರ ಒಳಗಡೆ ಈ ಸೌಲಭ್ಯವನ್ನು ಪಡೆಯಲು ಕಾಲಾವಕಾಶ ನೀಡಲಾಗಿದೆ” ಎಂದು ತಿಳಿಸಿದರು.
“ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯೆ ಮಾತನಾಡಿ, “ನ್ಯಾಯಾಲಯಗಳಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಮತ್ತು ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಒಂದು ಅತ್ಯುತ್ತಮ ಅವಕಾಶವಾಗಿದೆ. ಇಲ್ಲಿ ಕೇವಲ ಪ್ರಕರಣಗಳು ಇತ್ಯರ್ಥವಾಗುವುದಿಲ್ಲ, ಬದಲಿಗೆ ಉಭಯ ಪಕ್ಷಗಾರರ ನಡುವಿನ ಬಾಂಧವ್ಯವೂ ಗಟ್ಟಿಯಾಗುತ್ತದೆ” ಎಂದರು.
ಇದನ್ನೂ ಓದಿ : ಔರಾದ್ | ಸಬ್ಸಿಡಿ ಬೀಜ ನೆರೆ ರಾಜ್ಯದ ರೈತರಿಗೆ ಮಾರಾಟ : ಆರೋಪ
“ಈ ಪ್ರಕ್ರಿಯೆಯಲ್ಲಿ ಸಮಯ ಮತ್ತು ಹಣದ ಉಳಿತಾಯವಾಗುವುದಲ್ಲದೆ, ಇಲ್ಲಿ ನೀಡಲಾಗುವ ತೀರ್ಪಿಗೆ ಸಿವಿಲ್ ನ್ಯಾಯಾಲಯದ ತಿರ್ಪಿಗೆ ಇರುವಷ್ಟೇ ಕಾನೂನು ಮಾನ್ಯತೆ ಇರುತ್ತದೆ ಹಾಗೂ ಇದರ ವಿರುದ್ಧ ಮೇಲ್ಮನವಿಗೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಮತ್ತು ವ್ಯಾಜ್ಯನಿರತರು ಯಾವುದೇ ಭಯ ಅಥವಾ ಹಿಂಜರಿಕೆಯಿಲ್ಲದೆ ಈ ಅದಾಲತ್ನಲ್ಲಿ ಭಾಗವಹಿಸಿ, ಪರಸ್ಪರ ಒಪ್ಪಿಗೆಯ ಮೂಲಕ ತಮ್ಮ ದಾವೆಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು” ಎಂದು ಸಲಹೆ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಎಲ್ಲಾ ಸಿಬ್ಬಂದಿ ಮತ್ತಿತರು ಉಪಸ್ಥಿತರಿದ್ದರು.




