ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಜಿಲ್ಲೆಯ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ.
ಹುಮನಾಬಾದ್ ತಾಲೂಕಿನ ಸಿತಾಳಗೇರಾ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಬೀರಪ್ಪಾ ಹಾಗೂ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯಿತಿ ಪಿಡಿಒ ಅಬ್ದುಲ್ ರಜಾಕ್ ಅಮಾನತುಗೊಂಡವರು.
ಸಿತಾಳಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಂಬೂರ ಗ್ರಾಮದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಕುಡಿಯುವ ನೀರಿನ ಮೂಲಗಳ ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ್ದು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರಿಗೆ ಬಾಕಿ ಇರುವ ಗೌರವಧನ ಪಾವತಿಗೆ ಸಂಬಂಧಿಸಿದಂತೆ ಪಂಚಾಯಿತಿ ಖಾತೆಯಲ್ಲಿ ಹಣ ಇಲ್ಲದಿದ್ದರೂ ಚೆಕ್ ನೀಡಿ ಕರ್ತವ್ಯದಲ್ಲಿ ಲೋಪ ಎಸಗಿದಕ್ಕೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿ, ಸದರಿ ನೋಟಿಸ್ಗೆ ಪಿಡಿಒ ಸಮಜಾಯಿಸಿ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಲಾಗಿತ್ತು. ಪಿಡಿಒ ಮೇಲಿನ ಆರೋಪಗಳು ಸಾಬೀತಾಗಿರುವುದಾಗಿ ದೃಢಪಟ್ಟಿರುವುದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮುಡಬಿ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ಬಿಡುಗಡೆಯಾದ ಅನುದಾನದ ವೆಚ್ಚಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸುವಲ್ಲಿ ವಿಫಲರಾಗಿರುವುದು ಹಾಗೂ ಸಂಬಂಧಿಸಿದ ಹಣಕಾಸು ವ್ಯವಹಾರಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಆರೋಪದ ಹಿನ್ನೆಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯತ್ ಪಿಡಿಒ ಅಬ್ದುಲ್ ರಜಾಕ್ ಅವರನ್ನು ಅಮಾನತುಗೊಳಿಸಲಾಗಿದೆ.
ಮುಡಬಿ ಗ್ರಾಮ ಪಂಚಾಯಿತಿಯಲ್ಲಿ ಸುಮಾರು ₹34.04 ಲಕ್ಷ ಮೊತ್ತದ ಎಫ್ಟಿಒ (ಎಫ್ಟಿಒ)ಗಳನ್ನು ಸೃಷ್ಟಿಸಲಾಗಿದ್ದರೂ, ಅವುಗಳ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಖಜಾನೆಗೆ ಸಲ್ಲಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ತನಿಖೆಯಲ್ಲಿ ಕಂಡುಬಂದಿದೆ.
ಈ ಕುರಿತು ಬಸವಕಲ್ಯಾಣ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರು ಹಲವು ಬಾರಿ ಸೂಚನೆ ನೀಡಿದ್ದರೂ ಕ್ರಮ ಕೈಗೊಳ್ಳದಿರುವುದು ಗಮನಕ್ಕೆ ಬಂದಿದೆ. ಇದಲ್ಲದೆ, ಗ್ರಾಮ ಪಂಚಾಯಿತಿಯ ದೈನಂದಿನ ಕಾರ್ಯಗಳಲ್ಲಿ ಹಾಜರಿರದಿರುವುದು, ಸಾರ್ವಜನಿಕರಿಂದ ದೂರುಗಳು ಬಂದಿರುವುದು ಹಾಗೂ ಮೇಲಾಧಿಕಾರಿಗಳ ನೋಟಿಸ್ಗೆ ಸಮರ್ಪಕ ಉತ್ತರ ನೀಡದಿರುವುದು ಸಹ ಆರೋಪಗಳಲ್ಲಿ ಸೇರಿವೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಜುಲೈ 3ಕ್ಕೆ ಬೆಂಗಳೂರಿನಲ್ಲಿ ದಲಿತ ಜನಾಗೃಹ ಸಮಾವೇಶ
ಕರ್ನಾಟಕ ನಾಗರಿಕ ಸೇವೆ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ-10(1)(ಡಿ) ಅಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಇಬ್ಬರು ಪಿಡಿಒಗಳಾದ ರಮೇಶ ಬೀರಪ್ಪಾ ಹಾಗೂ ಅಬ್ದುಲ್ ರಜಾಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ತೊರೆಯುವಂತಿಲ್ಲ. ಕೆಸಿಎಸ್ಆರ್ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.




