- ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು
- ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ, ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿರುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದ್ದು, ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನು ಪಡೆಯಲಾಗಿಲ್ಲ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಜೋಡಿ ರಾಜ್ಯದಲ್ಲಿ ನಿರೀಕ್ಷಿತ ಮಟ್ಟಿಗೆ ಮೋಡಿ ಮಾಡಲೇ ಇಲ್ಲ. ರಾಜ್ಯದಲ್ಲಿ ಈ ಬಾರಿ ಬಿಜೆಪಿಗೆ 66 ಸ್ಥಾನಗಳನ್ನು ಮಾತ್ರವೇ ಗೆಲ್ಲಲು ಸಾಧ್ಯವಾಗಿದೆ.
ಕೊಡಗು ಜಿಲ್ಲೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಬಳ್ಳಾರಿ, ಯಾದಗಿರಿ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಯಲ್ಲಿ ಬಿಜೆಪಿಗೆ ಒಂದು ಸ್ಥಾನವೂ ಸಿಕ್ಕಿಲ್ಲ. ಇನ್ನೂ ವಿಜಯಪುರ, ಹಾವೇರಿ, ಮೈಸೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಬಿಜೆಪಿ ತಲಾ ಕೇವಲ ಒಂದೊಂದು ಕ್ಷೇತ್ರಗಳಲ್ಲಿ ಮಾತ್ರವೇ ಗೆದ್ದಿದೆ.
ಬಿಜೆಪಿಯ ಭದ್ರ ಕೋಟೆಯಾಗಿದ್ದ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಒಂದೂ ಸ್ಥಾನ ಗೆಲ್ಲದಿರುವುದು ಭಾರೀ ಮುಖಭಂಗವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲೆಡೆಯೂ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಬಿಜೆಪಿ ಭದ್ರಕೋಟೆಯಲ್ಲಿ ಭಾರಿ ಹೊಡೆತ
ಕಳೆದ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು, ಒಂದು ಕ್ಷೇತ್ರದಲ್ಲಿ ಮಾತ್ರವೇ ಕಾಂಗ್ರೆಸ್ ಗೆದ್ದಿತ್ತು. ದತ್ತ ಪೀಠ ವಿವಾದ ಆರಂಭವಾದಾಗಿನಿಂದ ಧರ್ಮ ರಾಜಕಾರಣವನ್ನೇ ಮುಂದಿಟ್ಟುಕೊಂಡು ಬಿಜೆಪಿ ಗೆಲುವು ಸಾಧಿಸುತ್ತ ಬಂದಿತ್ತು. ಆದರೆ, ಈ ಬಾರಿ ಮತದಾರ ಬಿಜೆಪಿ ಕೈ ಹಿಡಿದಿಲ್ಲ. ಎಲ್ಲ ಸಂದರ್ಭದಲ್ಲಿಯೂ ಧರ್ಮ ರಾಜಕಾರಣ ಕೆಲಸ ಮಾಡುವುದಿಲ್ಲ ಎಂಬುದನ್ನು ಜಿಲ್ಲೆಯ ಜನ ಸ್ಪಷ್ಟಪಡಿಸಿದ್ದಾರೆ.
ಯಾವಾಗಲೂ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸದಾ ಸುದ್ದಿಯಾಗುತ್ತಿದ್ದ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸೋಲು ಅನುಭವಿಸಿರುವುದು ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ.
ಇನ್ನು ಕೊಡಗು ಜಿಲ್ಲೆ ಕೂಡ ಬಿಜೆಪಿ ಭದ್ರಕೋಟೆಯಾಗಿತ್ತು. ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿವೆ. ಎರಡು ಕಡೆಯೂ ಈ ಬಾರಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ 2004ರಿಂದ ಸತತವಾಗಿ ಗೆಲುವು ಸಾಧಿಸಿಕೊಂಡು ಬರುತ್ತಿತ್ತು. ಕೋಮು ದ್ವೇಶ, ಧರ್ಮ ರಾಜಕಾರಣ, ಆಡಳಿತ ವಿರೋಧಿ ಅಲೆಗೆ ಬೇಸತ್ತಿರುವ ಮತದಾರರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳ ಕೈ ಹಿಡಿದಿದ್ದಾರೆ.
ಹಳೆಮೈಸೂರು ಭಾಗದಲ್ಲಿ ಬಿಜೆಪಿ ಕೈ ಹಿಡಿಯದ ಮತದಾರ
ಹಳೆಮೈಸೂರು ಭಾಗದಲ್ಲಿ ಬಿಜೆಪಿ ಖಾತೆ ತೆರಯಲು ಇನ್ನಿಲ್ಲದ ಕಸರತ್ತು ಮಾಡಿತ್ತು. ಈ ಭಾಗದ ಒಕ್ಕಲಿಗ ಸಮುದಾಯದ ಓಲೈಕೆಗೆ ಉರಿಗೌಡ-ನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ಮುನ್ನೆಲೆಗೆ ತರಲಾಗಿತ್ತು. ಮೈಸೂರು – ಬೆಂಗಳೂರು ನಡುವೆ ಆರು ಪಥದ ಎಕ್ಸ್ಪ್ರಸ್ ಹೈವೆ ನಿರ್ಮಿಸಿ ಅಬ್ಬರದ ಪ್ರಚಾರ ಪಡೆದರೂ, ನಂತರದಲ್ಲಿ ಟೋಲ್ ಸಂಗ್ರಹ ವಿಚಾರದಲ್ಲಿ ಜನವಿರೋಧ ಎದುರಿಸಬೇಕಾಯಿತು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ – ಅಮಿತ್ ಶಾ ಜೋಡಿ ರೋಡ್ ಶೋ ಮಾಡಿ, ಪ್ರಚಾರ ಸಭೆಗಳನ್ನು ಮಾಡಿದರೂ ಈ ಭಾಗದಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿದೆ.
ಮಂಡ್ಯ ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸಿಲ್ಲ. ಹಾಗೆಯೇ ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿದ್ದು, ಈ ಪೈಕಿ ಒಂದೇ ಒಂದು ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಿಲ್ಲ. ರಾಮನಗರ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಹಾಸನ ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳಿಗಷ್ಟೇ ಬಿಜೆಪಿ ತೃಪ್ತಿಪಟ್ಟುಕೊಂಡಿದೆ.
ಪ್ರಭಾವಿ ಸಚಿವನಿಗೂ ಸೋಲು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಲ್ಲಿ ಒಂದು ಕ್ಷೇತ್ರವೂ ಬಿಜೆಪಿ ಗೆದ್ದಿಲ್ಲ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರಿದ್ದ ಡಾ. ಕೆ ಸುಧಾಕರ್ ಗೆಲುವು ಸಾಧಿಸಿ ಆರೋಗ್ಯ ಇಲಾಖೆ ಸಚಿವರಾಗಿದ್ದರು. ಬಿಜೆಪಿಯಲ್ಲಿ ಪ್ರಭಲ ಸಚಿವರಾಗಿ ಬೆಳೆದ ಅವರು, ಕೋವಿಡ್ ಸಂದರ್ಭದಲ್ಲಿ ಅವರ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಸೋಲು ಅನುಭವಿಸ ಬೇಕಾಯಿತು ಎನ್ನಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕಾಂಗ್ರೆಸ್, ಎರಡು ಸ್ಥಾನಗಳನ್ನು ಜೆಡಿಎಸ್ ಪಡೆದುಕೊಂಡಿದೆ. ಕೋಲಾರದಲ್ಲಿಯೂ ಈ ಬಾರಿಯೂ ಬಿಜೆಪಿ ಒಂದು ಕ್ಷೇತ್ರವನ್ನೂ ಗೆದ್ದಿಲ್ಲ. ಬಳ್ಳಾರಿ, ಯಾದಗಿರಿ ಜಿಲ್ಲೆಯಲ್ಲಿಯೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದಿಲ್ಲ. ವಿಜಯಪುರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಬಿಜೆಪಿ ಕೇವಲ ಒಂದೊಂದು ಕ್ಷೇತ್ರಗಳಲ್ಲಿ ಮಾತ್ರವೇ ಗೆದ್ದಿದೆ.