- ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ಮುಂದುವರಿಸಲು ಅನುಮತಿ ನೀಡಿ
- ಪೋಕ್ಸೋ ಪ್ರಕರಣ ದಾಖಲಾದರೂ ಬಂಧಿಸದೆ, ಪ್ರತಿಭಟನೆ ಹತ್ತಿಕ್ಕುವ ಯತ್ನ
ಭಾರತೀಯ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಾನಾ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಮಧ್ಯ ಪ್ರವೇಶಿಸಿ, ಭಾರತೀಯ ಮಹಿಳಾ ಕುಸ್ತಿಪಟುಗಳಿಗೆ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮುಂದುವರಿಸಲು ಅವಕಾಶ ನೀಡಬೇಕು ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಕಾನೂನು ಪ್ರಕ್ರೀಯೇಗಳಿಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.
ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಕ್ಕೆ ಕೀರ್ತಿ ತಂದ ಹಲವಾರು ಮಹಿಳಾ ಕುಸ್ತಿ ಪಟುಗಳು (ಅಪ್ರಾಪ್ತರು ಸೇರಿದಂತೆ), ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳನ್ನು ಎತ್ತಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾದರೂ ಆರೋಪಿಯನ್ನು ಬಂಧಿಸದೆ ಪ್ರತಿಭಟನೆಯನ್ನೇ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಇದು ಸಂಪೂರ್ಣವಾಗಿ ತಪ್ಪು ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರವು ಮಹಿಳಾ ಕುಸ್ತಿಪಟುಗಳಿಗೆ ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ಮುಂದುವರಿಸಲು ಅನುಮತಿ ನೀಡಬೇಕು. ಮಹಿಳಾ ಕುಸ್ತಿಪಟುಗಳನ್ನು ತುಂಬಾ ಕ್ರೂರವಾಗಿ ನಡೆಸಿಕೊಂಡ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಿ, ಸೂಕ್ತ ವಿಚಾರಣೆ ನಡೆಸಿ, ತ್ವರಿತವಾಗಿ ಚಾರ್ಜ್ ಶೀಟ್ ಸಲ್ಲಿಸಲು ಮತ್ತು ಪ್ರಾಸಿಕ್ಯೂಷನ್ ಮಾಡಲು ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿದ್ಯುತ್ ದರ ಏರಿಕೆ ವಿರೋಧಿಸಿ ಕೈಗಳಿಗೆ ಬೇಡಿ ಹಾಕಿಕೊಂಡು ಪ್ರತಿಭಟನೆ
ಪ್ರತಿಭಟನೆಯನ್ನು ಉದ್ದೇಶಿಸಿ ರೈತ ಸೇನಾ ಕರ್ನಾಟಕದ ರಾಜ್ಯ ಅಧ್ಯಕ್ಷ ಶಂಕರ ಅಂಬಲಿ, ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಲಕ್ಷ್ಮಣ ದೊಡ್ಡಮನೆ, ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಮಹಾದೇವ ಕಾಂಬ್ಳೆ, ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಗಂಗಾಧರ ಬಡಿಗೇರ್ ಮಾತನಾಡಿದರು.
ಎಐಕೆಕೆಎಂಎಸ್ನ ಜಿಲ್ಲಾ ಅಧ್ಯಕ್ಷೆ ದೀಪಾ ಧಾರವಾಡ, ಜಿಲ್ಲಾ ಅಧ್ಯಕ್ಷೆ ಮದುಲತಾ ಗೌಡರ್, ಎಐಡಿವೈಒ ಜಿಲ್ಲಾ ಅಧ್ಯಕ್ಷ ಭವಾನಿಶಂಕರ್ ಗೌಡರ್, ಹನುಮೇಶ ಹುಡೇದ, ಯೋಗಪ್ಪ, ಪ್ರಶಾಂತ್ ಜಾದವ ಹಾಗೂ ಇತರರು ಭಾಗವಹಿಸಿದ್ದರು.