- ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸಿಡಬ್ಲ್ಯೂಎಂಎ ಆದೇಶ
- ಕಾನೂನು ತಜ್ಞರ ಜೊತೆ ತುರ್ತು ಸಭೆ, ಸಚಿವರು, ಸಂಸದರು ಭಾಗಿ
ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯೂಎಂಎ) ಕರ್ನಾಟಕ್ಕೆ ಆದೇಶಿಸಿದ್ದು, ಈ ಸಂಬಂಧ ಚರ್ಚಿಸಲು ದೆಹಲಿಯಲ್ಲಿ ಬುಧವಾರ ಮಹತ್ವದ ಸಭೆ ಆಯೋಜಿಸಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಹೊರಡಿಸಿದ ಆದೇಶವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಿಡಬ್ಲ್ಯೂಎಂಎ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಹೀಗಾಗಿ ತುರ್ತು ಸಭೆ ಆಯೋಜಿಸಲಾಗಿದ್ದು, ನಾಳಿನ ಸಭೆಗೆ ಪಾಲ್ಗೊಳ್ಳಲು ಮಂಗಳವಾರ ಸಂಜೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ಬುಧವಾರ ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ನಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಭಾಗಿಯಾಗಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರ್ಚಕರಾಗಿ ದಲಿತರು, ಮಹಿಳೆಯರ ನೇಮಕ ಕ್ರಾಂತಿಕಾರಿ ಹೆಜ್ಜೆಯೇ? ದೇಶ ಬದಲಾಯಿತೇ?
ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಕೇಂದ್ರದ ಬಳಿ ಬಾಕಿ ಯೋಜನೆಗಳ ಅನುದಾನ, ಬರ ಪರಿಹಾರದ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.