ಚಾಮರಾಜ ನಗರ ಜಿಲ್ಲೆಯಲ್ಲಿ ವಿದ್ಯುತ್ ಅಭಾವ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರ ತಾಲೂಕಿನ ಗಾಳೀಪುರ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 1027.31 ಲಕ್ಷ ರೂ ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 1.82 ಕಿಮೀ ಗಳ, 66/11 ಕೆವಿ ಉಪ ವಿದ್ಯುತ್ ಮಾರ್ಗಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
“ಜಿಲ್ಲೆಯಲ್ಲಿ ವಿದ್ಯುತ್ ಅಭಾವ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಪ್ರಾರಂಭಿಕ ಹಂತವಾಗಿ ಗಾಳಿಪುರದಲ್ಲಿ ಉಪ ಕೇಂದ್ರ ಲೋಕಾರ್ಪಣೆಯಾಗಿದೆ. ಚಾಮರಾಜನಗರ ತಾಲೂಕಿನ ಸೋಮವಾರಪೇಟೆ, ಗಾಳೀಪುರ, ಮಲ್ಲಯ್ಯನಪುರ, ಮೂಡಲಪುರ, ಉತ್ತವಳ್ಳಿ, ಯಡಪುರ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆ, ಹರದನಹಳ್ಳಿ, ಟಿ ಕೆ ಮೋಳೆ ಗ್ರಾಮಗಳ ವಿದ್ಯುತ್ ವೋಲ್ಟೇಜ್ ಸ್ಥಿತಿ ಸುಧಾರಿಸುವುದು ಹಾಗೂ ಅಡಚಣೆ ರಹಿತ ವಿದ್ಯುತ್ ಪೂರೈಕೆ ಮಾಡುವುದೇ ವಿದ್ಯುತ್ ಉಪ ಕೇಂದ್ರ ಯೋಜನೆಯ ಉದ್ದೇಶವಾಗಿದೆ” ಎಂದರು.

ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿ ರೈತರು ಕೃಷಿ ಚಟುವಟಿಕೆಗಳಿಗೆ ಹಾಗೂ ಸಾರ್ವಜನಿಕರಿಗೆ ವಿದ್ಯುತ್ ಪೂರೈಕೆ ಮಾಡುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಸೋಲಾರ್ ಪ್ಯಾನಲ್ಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಇದರಿಂದ ನಮಗೆ ಅಗತ್ಯವಿರುವಷ್ಟು ಪ್ರಮಾಣದ ವಿದ್ಯುತ್ ಬಳಸಿಕೊಂಡು ಉಳಿಕೆ ವಿದ್ಯುತ್ ಅನ್ನು ಅಗತ್ಯವಿರುವ ಇತರರಿಗೆ ನೀಡುವ ಗುರಿ ಹೊಂದಲಾಗಿದೆ ಎಂದರು.
ಈ ಯೋಜನೆಯಡಿ ಸೋಲಾರ್ ಪ್ಯಾನಲ್ಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದಿಸಿ ಜಿಲ್ಲೆಯ ರೈತರ ಕೃಷಿ ಚಟುವಟಿಕೆಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ 3 ಪೇಸ್ ವಿದ್ಯುತ್ ಒದಗಿಸಲು ಅನುಕೂಲವಾಗಲಿದೆ. ಇದಕ್ಕಾಗಿ ಜಿಲ್ಲಾಡಳಿತದಿಂದ 140 ಎಕರೆ ಜಾಗವನ್ನು ಜಿಲ್ಲೆಯ ವಿವಿಧ ಭಾಗಗಳಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ ಹಸ್ತಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಚಾಮರಾಜ ನಗರ ಸಂಸದ ಸುನಿಲ್ ಬೋಸ್, ಶಾಸಕ ಸಿ ಪುಟ್ಟರಂಗಶೆಟ್ಟಿ, ಎ ಆರ್ ಕೃಷ್ಣಮೂರ್ತಿ, ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್, ಕಾಡಾ ಅಧ್ಯಕ್ಷ ಪಿ ಮರಿಸ್ವಾಮಿ, ಪಂಚ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್ ವಿ ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
