ಸಾರ್ವಜನಿಕರಿಗೆ ತೊಂದರೆಯಾಗದಂತೆ ತ್ವರಿತ ಗತಿಯಲ್ಲಿ ಕೆಲಸಗಳನ್ನು ನಿರ್ವಹಿಸಬೇಕು ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲೂಕು ಸಭಾ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬರ ಪರಿಹಾರ ನಿರ್ವಹಣಾ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
“ಬರಗಾಲ ಪರಿಸ್ಥಿತಿ ಹಿನ್ನಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಬರ ಪರಿಹಾರ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕುಡಿಯುವ ನೀರಿಗೆ ಯಾವುದೇ ಕೊರತೆ ಬಾರದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಭ್ಯವಿರುವ ಅನುದಾನದಲ್ಲಿ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಬೇಕು. ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಹೆಚ್ಚು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದರು.
“ಜಾನುವಾರುಗಳಿಗೆ ಮೇವು ಕೊರತೆ ಕಾಡಬಾರದು. ಈಗಾಗಲೇ ಹೊರ ರಾಜ್ಯಗಳಿಗೆ ಮೇವು ಸಾಗಾಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಮೇವು ಬೆಳೆಯಲು ಕಿಟ್ಗಳನ್ನೂ ಕೂಡ ವಿತರಿಸಲಾಗಿದೆ. ನೀರು ಲಭ್ಯವಿರುವ ಸ್ಥಳಗಳಲ್ಲಿ ಮೇವು ಬೆಳೆಯಲು ಉತ್ತೇಜಿಸಬೇಕು. ಮುಂಬರುವ ದಿನಗಳಿಗೆ ಅಗತ್ಯ ಇರುವಷ್ಟು ಮೇವು ದಾಸ್ತಾನು ಮಾಡಲು ವಿಶೇಷ ಗಮನಹರಿಸಬೇಕು” ಎಂದು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
“ಪ್ರತಿ ಗ್ರಾಮಗಳಿಗೆ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಆಲಿಸಬೇಕು. ನೀವೇ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ತಾಲೂಕು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳೂ ಕೂಡ ಗ್ರಾಮ ಪಂಚಾಯಿತಿಗಳಿಗೆ ಅನಿರೀಕ್ಷಿತವಾಗಿ ಭೇಟಿ ಕೊಟ್ಟು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಗಳ ಪರಿಶೀಲನೆ ಮಾಡಬೇಕು” ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕ ಎಚ್ ಎಂ ಗಣೇಶ್ ಪ್ರಸಾದ್ ಅವರು ಮಾತನಾಡಿ, “ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ವಿದ್ಯುತ್ ಸಂಬಂಧಿ ಸಮಸ್ಯೆಗಳು ಸಾಕಷ್ಟು ಕೇಳಿಬರುತ್ತಿವೆ. ಇದರ ಪರಿಹಾರವಾಗಬೇಕು. ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡ ಕೆಲಸಗಳಿಗೆ ಶೀಘ್ರ ಕೂಲಿ ಪಾವತಿ ಆಗಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರಗಳು ಸಮರ್ಪಕವಾಗಿ ಪೂರೈಕೆಯಾಗಬೇಕು. ಯಾವುದೇ ದುರುಪಯೋಗಕ್ಕೆ ಅವಕಾಶವಾಗಬಾರದು” ಎಂದರು.
ಇದೇ ಸಂದರ್ಭದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, “ಕೊರೊನಾ ಸಂಬಂಧ ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಮದ್ದೂರು ಚೆಕ್ ಪೋಸ್ಟ್ ಬಳಿ ಥರ್ಮಲ್ ಸ್ಕ್ರೀನಿಂಗ್ ಮಾಡಲು ಸೂಚಿಸಲಾಗಿದೆ. ರೋಗ ಲಕ್ಷಣ ಕಂಡುಬಂದವರಿಗೆ ತಪಾಸಣೆ ಮಾಡಲು ತಿಳಿಸಲಾಗಿದೆ. ಚೆಕ್ ಪೋಸ್ಟ್ಗೆ ಭೇಟಿ ನೀಡಿ ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಲಾಗಿದೆ. ಮುಂಜಾಗ್ರತಾ ಕ್ರಮಗಳಿಗೆ ಗಮನಹರಿಸಿದ್ದೇವೆ” ಎಂದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಹಿಜಾಬ್ಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ʼಧರ್ಮ ದಂಗಲ್ʼ ಪದ ಬಳಕೆ; ಸಚಿವ ಸಂತೋಷ್ ಲಾಡ್ ಗರಂ
ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಬೇಕೆಂದು ಸಚಿವರು ಸೂಚಿಸಿದ್ದು, ಹಲವು ಗ್ರಾಮಗಳ ಕುಡಿಯುವ ನೀರಿನ ಬಗ್ಗೆ ಮಾಹಿತಿ ಪಡೆದುಕೊಂಡರು. ಕೆಲವು ದೂರುಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಟಿ ರಮೇಶ್ ಬಾಬ, ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.