ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ಚಾಮರಾಜನಗರ ಜಿಲ್ಲೆಗೆ ಮೊದಲ ಹಂತದಲ್ಲಿ 593 ಮನೆಗಳು ಮಂಜೂರಾಗಿದ್ದು, ಆದಿವಾಸಿಗಳ ಮನೆ ನಿರ್ಮಾಣ ಹಾಗೂ ಮೂಲಸೌಲಭ್ಯ ಕಲ್ಪಿಸುವ ಕಾಮಗಾರಿಗಳಿಗೆ ಅರಣ್ಯ ಇಲಾಖೆ ಯಾವುದೇ ರೀತಿಯ ಅಡ್ಡಿಪಡಿಸದೆ ಸಹಕರಿಸಬೇಕು ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ಆದಿವಾಸಿಗಳಿಗೆ ಮನೆ ನಿರ್ಮಿಸುವ ಸಂಬಂಧ ನಡೆದ ಸಭೆಯಯಲ್ಲಿ ಮಾತನಾಡಿ, 2025-26ನೇ ಸಾಲಿನ ಆಯವ್ಯಯದಲ್ಲಿ ಅರಣ್ಯ ಹಾಗೂ ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಆದಿವಾಸಿ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವುದಾಗಿ ಸರ್ಕಾರ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಸಮಿತಿ ರಚಿಸಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಮೀಕ್ಷೆ ನಡೆಸಿ, ಮನೆ ನಿರ್ಮಾಣಕ್ಕೆ ಜಿಲ್ಲಾಡಳಿತದ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 2,995 ಮನೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಮೊದಲ ಹಂತದಲ್ಲಿ 593 ಮನೆಗಳಿಗೆ ಮಂಜೂರಾತಿ ದೊರೆತಿದೆ ಎಂದು ಸಚಿವರು ತಿಳಿಸಿದರು.
ನಿವೇಶನ ಇದ್ದು ಮನೆ ಇಲ್ಲದ ಕುಟುಂಬಗಳು ಹಾಗೂ ನಿವೇಶನ ಮತ್ತು ಮನೆ ಎರಡೂ ಇಲ್ಲದ ಕುಟುಂಬಗಳನ್ನು ಗುರುತಿಸಿ ಮನೆ ನಿರ್ಮಿಸಬೇಕಾಗಿದೆ. ಮಂಜೂರಾಗಿರುವ 593 ಮನೆಗಳನ್ನು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಸಮಾನವಾಗಿ ಹಂಚಿಕೆ ಮಾಡಲಾಗುವುದು. ಮನೆ ನಿರ್ಮಾಣದ ಉಸ್ತುವಾರಿಯನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ವಹಿಸಲಾಗಿದೆ. ಸೂರಿನ ಅಗತ್ಯವಿರುವ ಅತ್ಯಂತ ಬಡ ಕುಟುಂಬಗಳನ್ನು ಗುರುತಿಸಿ ಮನೆಗಳನ್ನು ಮಂಜೂರು ಮಾಡಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆಗಳ ಮರುನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಭೂತಾಣಿಪೋಡು, ಬೇಡಗುಳಿ, ಹೊಸಪೋಡು, ಕೆ.ಗುಡಿ ಸೇರಿದಂತೆ ಕೆಲವು ಹಾಡಿ-ಪೋಡುಗಳಲ್ಲಿ ಆದಿವಾಸಿಗಳಿಗೆ ತುರ್ತಾಗಿ ಮನೆಗಳ ಅಗತ್ಯವಿದೆ ಎಂದು ಹೇಳಿದರು.
ಅರಣ್ಯದಂಚಿನ ಕೆಲವು ಹಾಡಿಗಳಲ್ಲಿ ವಾಸಿಸುವ ಆದಿವಾಸಿಗಳಿಗೆ ನಿವೇಶನದ ಅಸೆಸ್ಮೆಂಟ್ ಇನ್ನೂ ಲಭ್ಯವಾಗಿಲ್ಲ. ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಂದ ಅಸೆಸ್ಮೆಂಟ್ ವಿತರಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಗೆ ಮುಂದಿನ ಹಂತಗಳಲ್ಲಿ ಹೆಚ್ಚಿನ ಮನೆಗಳನ್ನು ಮಂಜೂರು ಮಾಡುವಂತೆ ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಈ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೂ ಚರ್ಚಿಸಲಾಗುವುದು.
ಆದಿವಾಸಿಗಳು ವಾಸಿಸುವ ಪ್ರದೇಶಗಳಲ್ಲಿ ಉತ್ತಮ ಗುಣಮಟ್ಟದ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸಹಕರಿಸಬೇಕು ಎಂದು ಪುಟ್ಟರಂಗಶೆಟ್ಟಿ ಹೇಳಿದರು.
ಈ ವಿಶೇಷ ವರದಿ ಓದಿದ್ದೀರಾ? ಗ್ರೌಂಡ್ ರಿಪೋರ್ಟ್ | ‘ಕಟ್ ಅಂಡ್ ಪೇಸ್ಟ್’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು
ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಹಿಂದಿನ ದಿನಗಳಲ್ಲಿ ಅರಣ್ಯ ಹಕ್ಕು ಕಾಯ್ದೆಗಳು ಪ್ರಭಾವಿಯಾಗಿರಲಿಲ್ಲ. ಇದೀಗ ಸಾಕಷ್ಟು ಕಠಿಣವಾಗಿವೆ. ಆದಿವಾಸಿಗಳ ಮನೆ ನಿರ್ಮಾಣ ಕಾರ್ಯಕ್ಕೆ ಯಾವುದೇ ಅಡೆತಡೆ ಉಂಟಾಗದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಈ ವಿಶೇಷ ವರದಿ ಓದಿದ್ದೀರಾ? ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು
ಸಭೆಯಲ್ಲಿ ಸಂಸದ ಸುನೀಲ್ಬೋಸ್, ಶಾಸಕರಾದ ಎಚ್.ಎಂ. ಗಣೇಶ್ಪ್ರಸಾದ್, ಎಂ.ಆರ್. ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಸ್. ಶ್ರೀಪತಿ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂಧ್ಯಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ತಹಶೀಲ್ದಾರರಾದ ಬಿ. ಗಿರಿಜಾ, ಬಸವರಾಜು, ಚೈತ್ರಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.




