ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಯಾದ ಚಾಮರಾಜನಗರಕ್ಕೆ ಸಚಿವ ಸ್ಥಾನ ದೊರೆತಿದ್ದು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಉಪ್ಪಾರ ಸಮುದಾಯದ ಪ್ರಮುಖ ನಾಯಕರಾಗಿರುವ ಸಿ. ಪುಟ್ಟರಂಗಶೆಟ್ಟಿ ರಾಜ್ಯದಲ್ಲಿ ಉಪ್ಪಾರ ಸಮಾಜವನ್ನು ಪ್ರತಿನಿಧಿಸುವ ಏಕೈಕ ಶಾಸಕರಾಗಿದ್ದು, ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ದೊರೆತಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.
ಸಿ. ಪುಟ್ಟರಂಗಶೆಟ್ಟಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 2018ರಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.
ಪ್ರಸ್ತುತ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಅವರಿಗೆ ಇದೀಗ ಮತ್ತೊಮ್ಮೆ ಸಚಿವ ಸ್ಥಾನ ದೊರೆತಿದೆ.
ಈ ವಿಶೇಷ ಸುದ್ದಿ ಓದಿದ್ದೀರಾ?SIR: ಕೊಡಗಿನ ಆದಿವಾಸಿಗಳ ಅಸ್ತಿತ್ವದ ಪ್ರಶ್ನೆಯ ಮುಂದೆ ಆಡಳಿತದ ಅಂಕಿ-ಅಂಶಗಳು ಸಾಕೇ?
ಅಭಿವೃದ್ಧಿಯ ಹಲವು ಮಾನದಂಡಗಳಲ್ಲಿ ಇನ್ನೂ ಹಿಂದುಳಿದ ಜಿಲ್ಲೆಯೆಂದು ಪರಿಗಣಿಸಲ್ಪಡುವ ಚಾಮರಾಜನಗರದಲ್ಲಿ ಮೂಲಸೌಕರ್ಯ, ಉದ್ಯೋಗ, ಕೈಗಾರಿಕೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ವ್ಯಕ್ತವಾಗಿದೆ. ಎರಡನೇ ಬಾರಿಗೆ ಸಚಿವರಾಗಿರುವ ಸಿ. ಪುಟ್ಟರಂಗಶೆಟ್ಟಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯಾವ ರೀತಿಯ ಆದ್ಯತೆ ನೀಡಲಿದ್ದಾರೆ ಎಂಬುದು ಈಗ ಜಿಲ್ಲೆಯ ಜನರ ಕುತೂಹಲದ ವಿಷಯವಾಗಿದೆ.




