ಚಾಮರಾಜ ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಚಾಮರಾಜನಗರ ದಸರಾ ಮಹೋತ್ಸವ’ ಆಚರಣೆ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯವಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್ ಮಾತನಾಡಿ, ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಜಿಲ್ಲೆಯಲ್ಲೂ ಅಕ್ಟೋಬರ್ 7 ರಿಂದ 9 ರವರೆಗೆ ‘ಚಾಮರಾಜನಗರ ದಸರಾ ಮಹೋತ್ಸವ’ವನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲು ಸಕಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ದೀಪಾಲಂಕಾರ ಹೆಚ್ಚು ಜನರನ್ನು ಸೆಳೆಯುವ ರೀತಿಯಲ್ಲಿ ಕೈಗೊಳ್ಳಬೇಕು. ಪ್ರಮುಖ ವೃತ್ತಗಳಲ್ಲಿ ವಿಶೇಷವಾಗಿ ದೀಪಾಲಂಕಾರ ವ್ಯವಸ್ಥೆಯಾಗಬೇಕು. ಇದಕ್ಕಾಗಿ ಹೆಚ್ಚಿನ ಅನುದಾನ ನಿಗದಿಮಾಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ ಪುಟ್ಟರಂಗಶೆಟ್ಟಿ ಮಾತನಾಡಿ, ಮೂರು ದಿನಗಳ ದಸರಾದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಮೂಡಿ ಬರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಫಲಪುಷ್ಪ ಪ್ರದರ್ಶನ, ಮಹಿಳಾ ದಸರಾ, ರೈತ ದಸರಾ, ಯುವ ಸಂಭ್ರಮ, ಗ್ರಾಮೀಣ ಕ್ರೀಡಾಕೂಟ, ಮ್ಯಾರಾಥಾನ್, ಪಾರಂಪರಿಕ ನಡಿಗೆ ಹೀಗೆ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಆಯೋಜಿತವಾಗಬೇಕು.
ಕಲಾ ತಂಡಗಳ ಮೆರವಣಿಗೆಯನ್ನು ಹೆಚ್ಚು ಆಕರ್ಷಕಗೊಳಿಸಬೇಕಿದೆ. ಆನೆ ಕರೆಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಈಗಾಗಲೇ ಪ್ರಸ್ತಾಪವಾಗಿರುವ ಜನನ ಮಂಟಪದಲ್ಲಿ ಸಾಂಪ್ರದಾಯಿಕ ದರ್ಬಾರ್ ಆಚರಣೆಗೂ ಅಗತ್ಯ ಸಲಹೆ ಅಭಿಪ್ರಾಯಗಳನ್ನು ಪಡೆದು ಸೂಕ್ತ ತೀರ್ಮಾನ ಕೈಗೊಳ್ಳಿ. ಜನರ ಅಭಿಲಾಷೆಯಂತೆ ದಸರಾ ಅತ್ಯಂತ ವ್ಯವಸ್ಥಿತವಾಗಿ ಆಯೋಜನೆ ಮಾಡಿ ಎಂದರು.
ಸಂಸದ ಸುನೀಲ್ ಬೋಸ್ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಸಾಧನೆ ಬಗ್ಗೆ ದಸರಾ ಕಾರ್ಯಕ್ರಮಗಳಲ್ಲಿ ತಿಳಿಸಬೇಕು. ಸರ್ಕಾರದ ಕಾರ್ಯಕ್ರಮಗಳು ಹೆಚ್ಚು ಜನರಿಗೆ ತಲುಪುತ್ತಿರುವ ಬಗ್ಗೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಪ್ರಸ್ತುತ ಪಡಿಸಬೇಕು. ಇದಕ್ಕಾಗಿ ಹೆಚ್ಚಿನ ಮುತುವರ್ಜಿ ವಹಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.
ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ, ಚಾಮರಾಜನಗರ ಜಿಲ್ಲಾ ಕೇಂದ್ರದ ಸಂಪರ್ಕಿಸುವ ಪ್ರಮುಖ ದ್ವಾರಗಳಲ್ಲಿ ವಿಶೇಷವಾಗಿ ದೀಪಾಲಂಕಾರ ಮಾಡಬೇಕು. ಈ ಮೂಲಕ ಎಲ್ಲೆಡೆ ಹಬ್ಬದ ವಾತಾವರಣ ಇರಬೇಕು ಎಂದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಲಾಗಿದೆ. ಯುವ ಸಂಭ್ರಮ, ದಸರಾ ಕ್ರಿಕೆಟ್ ಕಪ್, ಗ್ರಾಮೀಣ ಕ್ರೀಡಾಕೂಟದಂತಹ ವಿಶೇಷ ಕಾರ್ಯಕ್ರಮಗಳನ್ನು ಈ ಬಾರಿ ನಡೆಸಲಾಗುತ್ತಿದೆ. ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲು ರೂಪುರೇಷೆ ತಯಾರಿಸಿದ್ದು, ಸಮಿತಿಗಳು ಕಾರ್ಯೋನ್ಮುಖವಾಗಿವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಮಾತನಾಡಿ, ದಸರಾ ಹಿನ್ನೆಲೆಯಲ್ಲಿ ವಾಹನಗಳು ಮತ್ತು ಜನರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಮೆರವಣಿಗೆ ಸಾಗುವ ಮಾರ್ಗಗಳು, ದೀಪಾಲಂಕಾರಗಳ ಮಾರ್ಗಗಳಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಶಾಸಕರಾದ ಹೆಚ್ ಎಂ ಗಣೇಶ್ ಪ್ರಸಾದ್, ಸಿಎನ್ ಮಂಜೇಗೌಡ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷಎಸ್ ಜಯಣ್ಣ, ನಗರಸಭೆ ಅಧ್ಯಕ್ಷ ಎಸ್ ಸುರೇಶ್, ಉಪಾಧ್ಯಕ್ಷ ಮಮತಾ ಬಾಲಸುಬ್ರಹ್ಮಣ್ಯಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರತಾಪ್, ಅಕ್ಷಯ್, ಅಶೋಕ್, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
