ಕೆ ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮಿಸಾಗರ ಪಂಪ್ ಹೌಸ್ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಪಂಪ್ಹೌಸ್ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನ ತಮ್ಮ ಕಾವೇರಿ ನಿವಾಸದಲ್ಲಿ ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಿದರು.
ಕೋಲಾರ ಜಿಲ್ಲಾಡಳಿತ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಜಂಟಿಯಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ತಾಲೂಕಿನ ನರಸಾಪುರ ಹೋಬಳಿಯ ಲಕ್ಷ್ಮಿಸಾಗರ ಗ್ರಾಮದಲ್ಲಿನ ಕೆ ಸಿ ವ್ಯಾಲಿ ಯೋಜನೆಯ ಐದನೇ ಪಂಪಿಂಗ್ ಕೇಂದ್ರದ ಬಳಿ ಹಮ್ಮಿಕೊಳ್ಳಲಾಗಿತ್ತು.
ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, “ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಈ ಹಿಂದೆ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖವಾಗಿವೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ” ಎಂದರು.
“ಕೆ ಸಿ ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ -ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ” ಎಂದು ಹೇಳಿದರು.
“ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲವೆಂಬುದು ನಿರೂಪಿತವಾಗಿದೆ” ಎಂದು ಸ್ಪಷ್ಟಪಡಿಸಿದರು.
“ಕೆ ಸಿ ವ್ಯಾಲಿ ಎರಡನೇ ಹಂತ ಡಿಸೆಂಬರ್ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳು ಇಲ್ಲದಿರುವ ಕಾರಣ ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. 446 ಕೋಟಿಗಳ ವೆಚ್ಚದಲ್ಲಿ ಎರಡನೇ ಹಂತದ ಯೋಜನೆ ಕೈಗೊಳ್ಳಲಾಗಿದೆ. ಕೋಲಾರ ಜಿಲ್ಲೆಯ 222 ಕೆರೆಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ 50 ಕೆರೆಗಳನ್ನು ತುಂಬಿಸಲಾಗುತ್ತದೆ” ಎಂದರು.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, “272 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆ ರೂಪಿಸುವ ಮೂಲಕ ನಮ್ಮ ಕಾಂಗ್ರೆಸ್ ಸರ್ಕಾರ ಬಯಲುಸೀಮೆ ಜನರ ಹಿತ ಕಾಪಾಡಲು ಮುಂದಡಿ ಇಟ್ಟಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕೆರೆ ಬಳಿ ಹೋಗಿ ಜನ ಸೇರಿಸಿ ಕಾರ್ಯಕ್ರಮ ಮಾಡಬೇಕು. ಎಲ್ಲ ತಾಲೂಕುಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಯೋಜನೆಯ ಅನುಕೂಲ ತಿಳಿಸಬೇಕು” ಎಂದು ಸೂಚನೆ ನೀಡಿದರು.
ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು, ಇತರೆ ಸಚಿವರಾದ ಕೆ ಎಚ್ ಮುನಿಯಪ್ಪ, ಡಾ. ಎಂ ಸಿ ಸುಧಾಕರ್, ಡಾ. ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ಕೆ ವೈ ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ ಎಲ್ ಅನಿಲ್ ಕುಮಾರ್ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಇದ್ದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಭಾರತೀಯ ಸೇನೆ ಸೇರ ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ
ಲಕ್ಣ್ಮಿಸಾಗರ ಐದನೇ ಪಂಪಿಂಗ್ ಕೇಂದ್ರದ ಮುಂದೆ ದೊಡ್ಡಪರದೆಯಲ್ಲಿ ಉದ್ಘಾಟನೆಯ ನೇರಪ್ರಸಾರ ಮಾಡಲಾಯಿತು. ಈ ವೇಳೆ ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತ, ಉಪಾಧ್ಯಕ್ಷೆ ಪದ್ಮಾ, ಪಿಡಿಒ ಸಂಪರಾಜ್, ನರಸಾಪುರ ಗ್ರಾ.ಪಂ ಅಧ್ಯಕ್ಷ ಕುಮಾರ್, ಸೂಲೂರು ಗ್ರಾ.ಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಸಣ್ಣ ನೀರಾವರಿ ಇಲಾಖೆಯ ಹೆಚ್ಚುವರಿ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ವಿಷ್ಣು ಕಾಮತ್, ಸಹಾಯಕ ಎಂಜಿನಿಯರ್ ಶಶಿಕುಮಾರ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವೀರೇಂದ್ರ ಪಾಟೀಲ್, ನದೀಂ, ನಾರಾಯಣಸ್ವಾಮಿ, ಲಕ್ಷ್ಮೀಪತಿ ಜಾಲಿ ಬಾನು, ನವೀನ್, ಜಗನ್ ಸೇರಿದಂತೆ ಮುಂತಾದವರು ಇದ್ದರು.