ರಾಜ್ಯಾದ್ಯಂತ ಡೆಂಘೀ ಮಹಾಮಾರಿ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹಲವೆಡೆ ಸಾವು-ನೋವುಗಳು ಸಂಭವಿಸುತ್ತಿವೆ. ಡೆಂಘೀ ಅಬ್ಬರಕ್ಕೆ ಬ್ರೇಕ್ ಹಾಕುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗಳು ಬಹುತೇಕ ವಿಫಲವಾಗಿವೆ.
ಜಿಲ್ಲಾದ್ಯಂತ ಇದುವರೆಗೆ 92 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ ಶತಕದತ್ತ ಏರಿಕೆಯಾಗುತ್ತಿರುವುದು ಇಲಾಖೆಗಳ ವೈಫಲ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ವರ್ಷದ ಜನವರಿ ತಿಂಗಳಿನಿಂದಲೇ ಡೆಂಘೀ ಪ್ರಕರಣಗಳು ದಾಖಲಾಗುತ್ತಿದ್ದರೂ, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಸ್ಥಳೀಯ ಆಡಳಿತ ಸಂಸ್ಥೆಗಳು ಮುನ್ನೆಚ್ಚರಿಕೆ ವಹಿಸದೇ ಇರುವುದೇ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂಬ ದೂರುಗಳು ಕೇಳಿಬಂದಿದೆ.
ಚಿಕ್ಕಬಳ್ಳಾಪುರ ನಗರ ಮತ್ತು ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 36 ಡೆಂಘೀ ಪ್ರಕರಣಗಳು ದಾಖಲಾಗಿದ್ದು ಜಿಲ್ಲೆಯಲ್ಲೇ ಅಗ್ರಸ್ಥಾನದಲ್ಲಿದೆ. ಶಿಡ್ಲಘಟ್ಟ ತಾಲೂಕಿನಲ್ಲಿ 23 ಪ್ರಕರಣಗಳು ದಾಖಲಾಗುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಬಾಗೇಪಲ್ಲಿ(15), ಚಿಂತಾಮಣಿ(14), ಗೌರಿಬಿದನೂರು(11) ಹಾಗೂ ಗುಡಿಬಂಡೆ(4) ತಾಲೂಕುಗಳಿವೆ.
ಪ್ರಸ್ತುತ ರಾಜ್ಯ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಡೆಂಘೀ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈಗಷ್ಟೇ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿರುವಂತೆ ಕಂಡುಬರುತ್ತಿದೆ. ರೋಗದ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಕ್ತ ಕ್ರಮ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಡೆಂಘೀ ವಿರೋಧಿ ಮಾಸಾಚರಣೆ
ಈ ಕಾರ್ಯಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ, ಸಾರಿಗೆ ಹಾಗೂ ಇನ್ನಿತರ ಇಲಾಖೆಗಳ ಸಮನ್ವಯತೆಯೊಂದಿಗೆ ಕಾರ್ಯೋನ್ಮುಖವಾಗಿ ಜುಲೈ ಮಾಹೆಯನ್ನು ಡೆಂಘೀ ವಿರೋಧಿ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.
ಡೆಂಘೀ ಪ್ರಕರಣ ಕಂಡುಬರುವ ಗ್ರಾಮ ಮತ್ತು ವಾರ್ಡ್ಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಲು ಮಾರ್ಗಸೂಚಿಯ ಅನುಸಾರ ಫಾಗಿಂಗ್ ಮಾಡಲು ಸ್ಥಳೀಯಾಡಳಿತಗಳಿಗೆ ಸೂಚಿಸಲಾಗಿದೆ.
ಮುಂಜಾಗ್ರತಾ ಕ್ರಮಗಳು
ಎಲ್ಲ ನೀರಿನ ತೊಟ್ಟಿಗಳು, ಡ್ರಮ್, ಬ್ಯಾರಲ್ಗಳು, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ತಪ್ಪದೇ ಖಾಲಿ ಮಾಡಿ, ಒಣಗಿಸಿ ಪುನಃ ನೀರು ಭರ್ತಿ ಮಾಡಬೇಕು. ನೀರು ಖಾಲಿ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ತೊಟ್ಟಿ ಮುಂತಾದವುಗಳಲ್ಲಿ ಕೀಟಗಳು ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚಬೇಕು.
ಬಯಲಿನಲ್ಲಿರುವ ಘನತ್ಯಾಜ್ಯ ವಸ್ತುಗಳಾದ ಟಯರ್, ಎಳನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಗಳನ್ನು ಬಳಸುವುದು. ಸೊಳ್ಳೆ ಕಚ್ಚದಂತೆ ಎಚ್ಚರವಹಿಸಬೇಕು.
ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಕ್ರಮವಹಿಸುತ್ತಿದ್ದು, ಪ್ರತಿ ವಾರ ಶುಕ್ರವಾರದಂದು ಒಣ ದಿನ ಆಚರಿಸುವ ಮೂಲಕ ಮನೆಗಳ ಸುತ್ತಮುತ್ತ ನೀರು ಸಂಗ್ರಹವಾಗುವ ತಾಣಗಳನ್ನು, ಬಳಕೆ ಮಾಡಿ ಎಸೆದಿರುವ ಅನುಪಯುಕ್ತ ವಸ್ತುಗಳಲ್ಲಿ ನೀರು ಶೇಖರಣೆಯಾಗಿರುವುದನ್ನು ತೆರವುಗೊಳಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ ಮೊದಲ ಬಲಿ
ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಟ್ಯಾಂಕ್, ತೊಟ್ಟಿಗಳನ್ನು ನಿಯಮಿತವಾಗಿ ಶುಚಿಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಜಿಪಂ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ ತಿಳಿಸಿದ್ದಾರೆ.

ವಿಜಯ ಕುಮಾರ್ ಗಜ್ಜರಹಳ್ಳಿ
ಪತ್ರಕರ್ತ, ಚಿಕ್ಕಬಳ್ಳಾಪುರ ಜಿಲ್ಲಾ ಸಂಯೋಜಕರು