ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಾಗೇಪಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ಅರೆ ಬೆತ್ತಲೆ ಪ್ರದರ್ಶನ ಮಾಡಿ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸಚಿವ ಸಂಪುಟದ ಹೊಸ ಪಟ್ಟಿಯಲ್ಲಿ ಸುಬ್ಬಾರೆಡ್ಡಿ ಅವರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ರಸ್ತೆ ಮಧ್ಯೆ ಟೈರ್ ಸುಟ್ಟು ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲಕಾಲ ಪ್ರತಿಭಟನೆಯಿಂದ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಮರ್ಪಕ ಪ್ರಾತಿನಿಧ್ಯ ನೀಡಿಲ್ಲ ಎಂದು ಆರೋಪಿಸಿದ ಕಾರ್ಯಕರ್ತರು, ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ಮುಂತಾದ ಅಮರನಾಥ ರೆಡ್ಡಿ ಮಾತನಾಡಿ
ಬಾಗೇಪಲ್ಲಿ ಗಡಿ ಭಾಗದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಸತತ ಮೂರು ಬಾರಿ ಗೆದ್ದಿರುವ ಅವರಿಗೆ ಸಚಿವ ಸ್ಥಾನ ಕೊಡಲೇಬೇಕು. ಪದೇ ಪದೇ ಒಕ್ಕಲಿಗ ಸಮುದಾಯದ ಶಾಸಕರನ್ನ ಕಡೆಗಣಿಸಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಸಚಿವ ಸ್ಥಾನ ಕೊಡಲಿಲ್ಲ. ಎರಡನೇ ಅವಧಿಯ ಡಿ.ಕೆ ಶಿವಕುಮಾರ್ ಅವಧಿಯಲ್ಲಾದರೂ ಸಿಗುವ ನಿರೀಕ್ಷೆ ಇತ್ತು. ಈ ಬಾರಿಯೂ ಸಚಿವ ಸ್ಥಾನದಿಂದ ವಂಚಿಸುತ್ತಿರುವುದು ಸರಿಯಲ್ಲ.ಆದ್ದರಿಂದ ಬುಧವಾರ ಬಾಗೇಪಲ್ಲಿ ತಾಲ್ಲೂಕು ಬಂದ್ ಗೆ ಕರೆ ನೀಡಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಮುಖಂಡ ಸೋಮಶೇಖರ್ ಮಾತನಾಡಿ ಶಾಸಕ ಎಸ್. ಎನದ.ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲ್ಲೂಕಿಗೆ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದು, ಪಕ್ಷ ಸಂಘಟನೆ ಬಲಪಡಿಸುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ. ಬಾಗೇಪಲ್ಲಿ ಗಡಿ ಭಾಗದಲ್ಲಿ ಸತತ ಮೂರು ಬಾರಿ ಗೆದ್ದ ಶಾಸಕರನ್ನು ಸಚಿವ ಸಂಪುಟದಿಂದ ಹೊರಗಿಡುವುದು ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 2028ರ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ಎಸ್ಐಆರ್ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎ.ವಿ.ಪೂಜಪ್ಪ, ಜಯಪ್ರಕಾಶ್ ನಾರಾಯಣ್, ಬಿ.ವಿ.ವೆಂಕಟರವಣ, ನಂಜುಂಡಪ್ಪ, ಮಹಮ್ಮದ್ ನೂರುಲ್ಲಾ,ಶಿವರಾಮ ರೆಡ್ಡಿ,ಶ್ರೀರಾಮ ನಾಯಕ್, ಶ್ರೀನಿವಾಸ್,ನಿಜಾಮುದ್ದೀನ್ ಬಾಬು, ನವೀನ್,ಗೂಳೂರು ಬಾಬು,ಹಾಗೂ ಇತರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.




