ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ರಸ್ತೆಯನ್ನು 38.5 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ಮಾಡಿ, ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ನಡೆಯುತ್ತಿರುವ ಹೊಸಕೋಟೆ-ಚಿಂತಾಮಣಿ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಸ್ಥಳಕ್ಕೆ ಶುಕ್ರವಾರ (ಮಾ.1) ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಉದ್ದೇಶಿತ ರಸ್ತೆ ಕಾಮಗಾರಿ ಚತುಷ್ಪಥ ರಸ್ತೆಯದ್ದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ 38.5ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಿದೆ. ಎಚ್.ಕ್ರಾಸ್ ಮಾರ್ಗವಾಗಿ ಈ ರಸ್ತೆ ಸಾಗಲಿದ್ದು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ರಸ್ತೆಯ ಹಲವೆಡೆಗಳಲ್ಲಿನ ಏರುಪೇರುಗಳಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದರು.
ಜತೆಗೆ ಸುಂಕ ವಸೂಲಿ (ಟೋಲ್ ಗೇಟ್) ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಕಾಮಗಾರಿ ಕೈಗೊಳ್ಳಲು ವಿನ್ಯಾಸ, ನೀಲನಕ್ಷೆಯನ್ನು ಯೋಜಿತ ರೀತಿಯಲ್ಲಿ ಸಿದ್ದಪಡಿಸಲಾಗಿದೆ. ಈ ಉದ್ದೇಶಿತ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಇಲಾಖೆ ಸಚಿವರಿಗೆ ಪತ್ರವನ್ನು ಬರೆಯಲಾಗಿದೆ ಎಂದು ತಿಳಿಸಿದರು.
ಈ ವೇಳೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಕಾರ್ಯಪಾಲಕ ಅಭಿಯಂತರ ವಸಂತ್, ಶಿಡ್ಲಘಟ್ಟ ತಹಸೀಲ್ದಾರ್ ಎಂ.ಎನ್. ಸ್ವಾಮಿ ಗೌಡ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿ ವರ್ಗ, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.