ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ ಹವೆ ಮುಂದುವರೆದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
ಭಾನುವಾರ (ಮಾರ್ಚ್ 24) ಬೆಳಗಿನ ವರೆಗೆ ದಾಖಲಾಗಿರುವ ಮಾಹಿತಿಯ ಪ್ರಕಾರ, ಚಿಕ್ಕಮಗಳೂರು ಹಾಗೂ ಬೆಳಗಾವಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಲೋಂಡಾದಲ್ಲಿ 1 ಸೆಂಟಿ ಮೀಟರ್ ಮಳೆಯಾಗಿರುವ ವರದಿಯಾಗಿದೆ.
ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಯಾದಗರಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್ನಿಂದ 5.0 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚಳವಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನಲ್ಲಿ ಸೋಮವಾರ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಅಲ್ಪ ಬಿಸಿಯ ವಾತಾವರಣವಿದೆ. ಆದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ. ಬೆಳಗ್ಗೆ 10ರ ಬಳಿಕ ಬಿಸಿ ಹೆಚ್ಚಾಗಲಿದೆ. ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ 39.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಮಂಡ್ಯದಲ್ಲಿ ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಿಗೆ ನಿತ್ಯ 1 ಲಕ್ಷ ಲೀಟರ್ ಕಾವೇರಿ ನೀರು ಉಚಿತ ಸರಬರಾಜು: ಜಲಮಂಡಳಿ ಅಧ್ಯಕ್ಷ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದಲ್ಲಿ ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
