ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿ ಪಿಎಸ್ಐ ಸೇರಿ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಯುವ ವಕೀಲ ಪ್ರೀತಂ ಎಂಬುವವರು ಗುರುವಾರ ರಾತ್ರಿ ಹೆಲ್ಮೆಟ್ ಇಲ್ಲದೆ ಮಾರುಕಟ್ಟೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಚಿಕ್ಕಮಗಳೂರು ನಗರ ಪೊಲೀಸರು, ಅವರ ಬೈಕ್ನಿಂದ ಕೀ ಕಸಿದುಕೊಂಡಿದ್ದಾರೆ. ಬಳಿಕ ಠಾಣೆಯೊಳಗೆ ಕರೆದುಕೊಂಡು ಹೋಗಿ, ಕೂಡಿ ಹಾಕಿದ್ದಲ್ಲದೇ, ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ.

ಈ ಘಟನೆಯ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಪೂಜಾರಿ ಸೇರಿ ಆರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ.
ಆಗಿದ್ದೇನು?
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿರುವ ಯುವ ವಕೀಲ ಪ್ರೀತಂ, “ಗುರುವಾರ ರಾತ್ರಿ ಹೆಲ್ಮೆಟ್ ಇಲ್ಲದೆ ಮಾರುಕಟ್ಟೆ ರಸ್ತೆಯಲ್ಲಿ ಹೋಗುತ್ತಿದ್ದೆ. ಪೊಲೀಸರು ತಡೆದದ್ದಕ್ಕೆ ನಿಲ್ಲಿಸಿದೆ. ಕೂಡಲೇ ಬೈಕ್ ಕೀ ತೆಗೆದುಕೊಂಡರು. ಹೆಲ್ಮೆಟ್ ಹಾಕದಿರುವುದಕ್ಕೆ ದಂಡ ಕಟ್ಟುತ್ತೇನೆ, ಕೀ ಕಸಿದುಕೊಳ್ಳಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು? ನಾನು ವಕೀಲ ಎಂದು ತಿಳಿಸಿದೆ. ಅದನ್ನು ವಿಡಿಯೋ ಕೂಡ ಮಾಡಿಕೊಂಡೆ’ ಎಂದು ತಿಳಿಸಿದ್ದಾರೆ.
‘ಇದರಿಂದ ಕೋಪಗೊಂಡ ಪೊಲೀಸರು, ಬಳಿಕ ನನ್ನನ್ನು ಠಾಣೆಯ ಒಳಗೆ ಕರೆದೊಯ್ದಿದ್ದಾರೆ. ಕಂಪ್ಯೂಟರ್ ಕೊಠಡಿಯಲ್ಲಿ ಕೂಡಿ ಹಾಕಿ ಮನ ಬಂದಂತೆ ದೊಣ್ಣೆ, ಲಾಠಿ, ಪೈಪ್ನಿಂದ ಹಲ್ಲೆ ನಡೆಸಿದರು. ಕಾಲಿನಿಂದಲೂ ತುಳಿದರು’ ಎಂದು ಪ್ರೀತಂ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಚಿಕ್ಕಮಗಳೂರಿನ ವಕೀಲರು, ಠಾಣೆಯ ಎದುರು ಜಮಾಯಿಸಿದ್ದಾರೆ. ಬಳಿಕ ಪ್ರೀತಂ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಪ್ರೀತಂ ಅವರ ಎದೆ, ಕೈ ಮತ್ತು ಬೆನ್ನಿಗೆ ಸಾಕಷ್ಟು ಗಾಯಗಳಾಗಿದ್ದು, ಇದು ವಕೀಲ ಸಮೂಹವನ್ನು ಇನ್ನಷ್ಟು ಕೆರಳುವಂತೆ ಮಾಡಿದೆ. ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿ, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು ವಕೀಲರನ್ನು ಸಮಾಧಾನಪಡಿಸಲು ಯತ್ನಿಸಿದರು. ಆ ಬಳಿಕ ಹೇಳಿಕೆ ನೀಡಿರುವ ಚಿಕ್ಕಮಗಳೂರು ಎಸ್ಪಿ, ‘ಠಾಣೆಯ ಸಬ್ ಇನ್ಸ್ಪೆಕ್ಟರ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿ ಆರು ಪೊಲೀಸರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಅಷ್ಟೂ ಜನರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಇಡೀ ಪ್ರಕರಣದ ಸಂಬಂಧ ತನಿಖೆ ನಡೆಸಿ ವರದಿ ನೀಡಲು ಡಿವೈಎಸ್ಪಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.
ಈ ನಡುವೆ ಪೊಲೀಸರ ಕೃತ್ಯ ಖಂಡಿಸಿ ವಕೀಲರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜಿಲ್ಲೆಯಲ್ಲದೆ ಹೊರ ಜಿಲ್ಲೆಗಳಿಂದಲೂ ನೂರಾರು ವಕೀಲರು ಚಿಕ್ಕಮಗಳೂರಿಗೆ ಬರುತ್ತಿದ್ದಾರೆ.
ವಕೀಲರ ಸಂಘದಲ್ಲಿ ತುರ್ತು ಸಭೆ ನಡೆಸಿದ್ದು, ಆರೋಪಿತ ಪೊಲೀಸರನ್ನು ಬಂಧಿಸುವ ತನಕ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುವ ಮುನ್ಸೂಚನೆಯಿಂದ ನಗರದಲ್ಲಿ ಹೆಚ್ಚಿನ ಬಂದೋಬಸ್ತ್ ಏರ್ಪಡಿಸಲಾಗಿದೆ.