- ಬೆಲೆಬಾಳುವ ವಸ್ತುಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ದಾಳಿ
- ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸರ ಜಂಟೀ ಕಾರ್ಯಚರಣೆ
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾವಿರಾರು ಸೀರೆಗಳನ್ನು ಚಿಕ್ಕಮಗಳೂರಿನ ಅಧಿಕಾರಿಗಳು ಹಾಗೂ ಪೊಲೀಸರು ಜಂಟೀ ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ನಗರದ ಚೆಕ್ಪೋಸ್ಟ್ನಲ್ಲಿ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಹಲವು ವಾಹನಗಳನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಸೂಕ್ತ ದಾಖಲೆ ಒದಗಿಸದ ಹಲವು ವ್ಯಕ್ತಿಗಳಿಂದ 2.6 ಕೋಟಿ ಮೌಲ್ಯದ ಚಿನ್ನದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷದವರು ಮತದಾರರಿಗೆ ಆಮೀಷವೊಡ್ಡಲು ಅಕ್ರಮವಾಗಿ ಬೆಲೆಬಾಳುವ ವಸ್ತುಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದು, ಈ ವೇಳೆ, ಕೋಟ್ಯಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು ಮತ್ತು ಶೃಂಗೇರಿ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಸೀರೆಗಳು, ಪ್ರೆಶರ್ ಕುಕ್ಕರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1,000 ಸೀರೆಗಳಿಗೆ ಇನ್ವಾಯ್ಸ್ ಲಭ್ಯವಿದ್ದರೂ, ಖರೀದಿದಾರರ ವಿಳಾಸ ಮತ್ತು ಸಂಪರ್ಕ ಸಂಖ್ಯೆ ಸ್ಪಷ್ಟವಾಗಿಲ್ಲದ ಕಾರಣ ಸರಕುಗಳನ್ನು ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯು ಸೀರೆ ಪೂರೈಕೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಸೂರತ್ನಿಂದ ಸರಕುಗಳನ್ನು ಸರಬರಾಜು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.