ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹೆಬ್ಬೆ ವನ್ಯಜೀವಿ ವಲಯದಲ್ಲಿ ನಡೆದಿದೆ.
ಸಿದ್ದರಾಮಯ್ಯ ಸೇತುವೆ ಸಮೀಪದ ಮೋರಿಮಠ ಆಸುಪಾಸಿನ ಹೆಬ್ಬೆ ವಲಯದ ಕಲ್ಲುಕೊವೆ ಗ್ರಾಮದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಭದ್ರಾ ಬ್ಯಾಕ್ ವಾಟರ್ ಪ್ರದೇಶದಲ್ಲಿ ಬೀಡು ಬಿಟ್ಟಿರುವ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡಿನ ಚಲನವಲನದ ಮೇಲೆ ನಿಗಾ ವಹಿಸುತ್ತಿದ್ದ ವೇಳೆ ಏಕಾಏಕಿ ಆನೆಗಳು ದಾಳಿ ನಡೆಸಿವೆ ಎಂದು ತಿಳಿದುಬಂದಿದೆ.
ದಾಳಿಯಲ್ಲಿ ಅರಣ್ಯ ವೀಕ್ಷಕರಾದ ಹರೀಶ್, ಬಸವರಾಜ್ ಗಾಯಗೊಂಡಿದ್ದಾರೆ. ಹರೀಶ್ ಅವರಿಗೆ ಬೆನ್ನು ಮೂಳೆಯ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದ್ದು, ಬಸವರಾಜ್ ಅವರಿಗೆ ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ಅರಣ್ಯ ವೀಕ್ಷಕ ಹರೀಶ್ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಪೈನಲ್ ಕಾರ್ಡ್ಗೆ ತೀವ್ರ ಪೆಟ್ಟು ಬಿದ್ದಿರುವ ಕಾರಣ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನಾಲ್ಕು ಗಂಟೆಗಳೊಳಗೆ ಸ್ಥಳಾಂತರಿಸುವಂತೆ ವೈದ್ಯರು ಸೂಚನೆ ನೀಡಿದ್ದರಿಂದಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಭದ್ರಾ ಅಭಯಾರಣ್ಯದ ಹೆಬ್ಬೆ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಹಿಂಡು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಎನ್ ಆರ್ ಪುರ ಪಟ್ಟಣದಿಂದ ಕೇವಲ 10 ಕಿಲೋಮೀಟರ್ ದೂರದಲ್ಲೇ ಬೀಡು ಬಿಟ್ಟಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ಗಸ್ತು ಮತ್ತು ನಿಗಾ ಕಾರ್ಯಾಚರಣೆ ನಡೆಸುತ್ತಿರುವ ನಡುವೆಯೇ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿದ್ದೀರಾ? ಎತ್ತಿನಹೊಳೆ ಹೆಸರಲ್ಲಿ ಮತ್ತೊಂದು ಧೋಖಾ: ಬೃಹತ್ ಕೈಗಾರಿಕಾ ಕಾಮಗಾರಿಗಳಿಗೆ ನೀರೊದಗಿಸುವ ಟೆಂಡರ್
ಘಟನೆ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಕಾಡಾನೆಗಳ ಚಲನವಲನದ ಮೇಲೆ ಹೆಚ್ಚಿನ ನಿಗಾ ವಹಿಸಲು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.




