ತಾಲ್ಲೂಕಿನ ಮಿನಿ ಕಂಬಾಲಹಳ್ಳಿ ಗ್ರಾಮದಲ್ಲಿ ಊಲವಾಡಿ ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ಗ್ರಾಮ ಸಭೆಯು ಯಶಸ್ವಿಯಾಗಿ ಜರುಗಿತು.
ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಎಸ್. ಆನಂದ್ ಅವರು,ಗ್ರಾಮದ ಸಮಗ್ರ ಅಭಿವೃದ್ಧಿಗೆ ಪಂಚಾಯತಿ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡುತ್ತಾ ಮಾತನಾಡಿದವರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕಟ್ಟಡ ಹಾಗೂ ಸಮುದಾಯ ಭವನವನ್ನು ಶೀಘ್ರದಲ್ಲೇ ದುರಸ್ತಿ ಮಾಡಿಸಿಕೊಡಲಾಗುವುದು.ಅಲ್ಲದೆ, ಅಂಬೇಡ್ಕರ್ ಸಮುದಾಯ ಭವನವನ್ನು ಅತ್ಯಂತ ಸ್ವಚ್ಛವಾಗಿ ಹಾಗೂ ನೀಟಾಗಿ ನಿರ್ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಗ್ರಾಮದ ಮಕ್ಕಳಿಗೆ ಸಂಜೆ ವೇಳೆ ವಿದ್ಯಾಭ್ಯಾಸಕ್ಕೆ ನೆರವಾಗಲು,ಪದವಿ ಮುಗಿಸಿರುವ ಸ್ಥಳೀಯ ಯುವಕ-ಯುವತಿಯರಿಗೆ ಸೂಕ್ತ ಗೌರವಧನ ನೀಡಿ,ಮಕ್ಕಳಿಗಾಗಿ ಟ್ಯೂಷನ್ ವ್ಯವಸ್ಥೆ ಮಾಡಲಾಗುವುದು.ಜೊತೆಗೆ ಸಂಜೆ ವೇಳೆ ಓದಲು ಅನುಕೂಲವಾಗುವಂತೆ ಲೈಟ್ ವ್ಯವಸ್ಥೆಯೊಂದಿಗೆ ಪುಸ್ತಕಗಳನ್ನೊಳಗೊಂಡ ಲೈಬ್ರರಿಯನ್ನು ಕಲ್ಪಿಸಲಾಗುವುದು. ಇದರಿಂದ ಯುವಕರು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ, ಜ್ಞಾನಾರ್ಜನೆ ಕಡೆಗೆ ಗಮನ ಹರಿಸಲು ಸಾಧ್ಯವಾಗುತ್ತದೆ ಎಂದರು.
ಗ್ರಾಮದಲ್ಲಿರುವ ಚರಂಡಿಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗುವುದು.ಇನ್ನುಳಿದ ಚರಂಡಿಗಳ ನಿರ್ಮಾಣ ಕಾರ್ಯವನ್ನು ಕ್ರಿಯಾ ಯೋಜನೆಯಲ್ಲಿ ಸೇರಿಸಿ, ಶೀಘ್ರದಲ್ಲೇ ಕಾಮಗಾರಿ ಹಮ್ಮಿಕೊಳ್ಳಲಾಗುವುದು.ಮನೆಗಳ ಮುಂದೆ ಸೌದೆಗಳನ್ನು ಹಾಕಿ ಜಾಗ ಅತಿಕ್ರಮಿಸದಂತೆ ಹಾಗೂ ಗ್ರಾಮವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ತಿಳಿಸಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳು ಈಗಾಗಲೇ ತಿಳಿಸಿರುವಂತೆ ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಬರುತ್ತವೆ. ಆದ್ದರಿಂದ ಗ್ರಾಮಸ್ಥರು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ಕೈಬಿಟ್ಟು,ಬಟ್ಟೆ ಕೈಚೀಲಗಳನ್ನು ಬಳಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲೂಕಿನ ದೊಡ್ಡ ದೊಡ್ಡ ಗ್ರಾಮಗಳಿಗೆ ಈಗಾಗಲೇ ಸುಮಾರು 135 ರಿಂದ 140 ಹೊಸ ವಾಟರ್ ಫಿಲ್ಟರ್ಗಳನ್ನು ಅಳವಡಿಸಲಾಗಿದೆ. ಒಟ್ಟು 46 ಹಳ್ಳಿಗಳಲ್ಲಿ ಈ ಸೌಲಭ್ಯವಿದ್ದು, ಅದರಲ್ಲಿ ಮಿನಿ ಕಂಬಾಲಹಳ್ಳಿ ಗ್ರಾಮವೂ ಒಂದಾಗಿದೆ.ಶೀಘ್ರದಲ್ಲೇ ಇಲ್ಲಿಯೂ ಶುದ್ಧ ಕುಡಿಯುವ ನೀರಿನ ಘಟಕದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ ಅವರು ಪ್ರೌಢಶಾಲೆಯಲ್ಲಿ ಓದುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಜಿ ಸಚಿವ ಹಾಗೂ ಶಾಸಕ ಡಾ.ಎಂ ಸಿ ಸುಧಾಕರ್ ಅವರ ಮಾರ್ಗದರ್ಶನದಂತೆ ಎಲ್ಲಾ ಹೈಸ್ಕೂಲ್ಗಳಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯವನ್ನು ಅಳವಡಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಇದನ್ನು ಓದಿದ್ದೀರಾ..? ಕೋಲಾರ | ಸಕಾಲದಲ್ಲಿ ಪಿಂಚಣಿ ವಿತರಣೆ, ಬಲವಂತ ಭೂ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ
ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ವಿ,ಹಾಗೂ ಊಲವಾಡಿ ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು,ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಿನಿ ಕಂಬಾಲಹಳ್ಳಿ ಗ್ರಾಮದ ನೂರಾರು ಮಹಿಳೆಯರು ಮತ್ತು ಸಾರ್ವಜನಿಕರು ಭಾಗವಹಿಸಿ,ತಮ್ಮ ಗ್ರಾಮದ ಕುಂದುಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.




