ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಈಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಸೂಚನೆ ನೀಡಿದ್ದಾರೆ.
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುವ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳ ಕುರಿತು ಡನೆದ ಸಭೆಯಲ್ಲಿ ಅವರು ಮಾತನಾಡಿದರು. “ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳು ಈಗಾಗಲೇ ಬರಪೀಡಿತ ತಾಲೂಕುಗಳು ಎಂದು ಘೋಷಣೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಈಗಾಗಲೇ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ” ಎಂದರು.
ಆಯಾ ಕ್ಷೇತ್ರ ಶಾಸಕರುಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ತಾಲೂಕು ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ಸಭೆಯನ್ನು ಏರ್ಪಡಿಸಿ, ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕಾಗಿ ಎಲ್ಲೆಲ್ಲಿ ನೀರಿನ ಮೂಲಗಳಿವೆ, ಪೈಪ್ ಲೈನ್ ವಿಸ್ತರಣೆ, ಬೋರೈಲ್ಗಳ ದುರಸ್ತಿ, ಟ್ಯಾಂಕರ್ ಮೂಲಕ ಪೂರೈಕೆ ಸೇರಿದಂತೆ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಿ, ಪರಿಹಾರ ಕಾರ್ಯ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ನಡಾವಳಿಯಲ್ಲಿ ಗೊತ್ತುಪಡಿಸಿ, ಪ್ರಸ್ತಾವನೆ ಸಲ್ಲಿಸುವ ಕಾರ್ಯ ತ್ವರಿತವಾಗಿ ಆಗಬೇಕು ಎಂದರು.
ನೀರಿನ ಸಮಸ್ಯೆಯಾಗದಂತೆ ಖಾಸಗಿ ಬೋರೈಲ್ಗಳನ್ನು ಗುರುತಿಸಿಟ್ಟುಕೊಂಡಿರಬೇಕು. ಮಾಲೀಕರ ಮನವೊಲಿಸಿ ಬಾಡಿಗೆ ನಿಗದಿಪಡಿಸಬೇಕು. ಅಂತಹ ಬೋರೈಲ್ ಅಗತ್ಯವಿದ್ದರೆ ತ್ವರಿತವಾಗಿ ಗುರುತಿಸುವ ಕೆಲಸ ಆಗಬೇಕು ಎಂದು ಸೂಚಿಸಿದರು.
ಅಗತ್ಯವಿದ್ದರೆ ಪೈಪ್ಲೈನ್ ಮಾಡಿಕೊಳ್ಳಬಹುದು. ಒಂದು ವೇಳೆ ನೀರು ಲಭ್ಯವಾಗದೇ ಇರುವ ಪಕ್ಷದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು ಕೊನೆಯ ಆದ್ಯತೆಯಾಗಬೇಕು ಎಂದು ಹೇಳಿದರು.
ಚಳ್ಳಕೆರೆ ತಾ.ಪಂ ಇಒ ಮಾತನಾಡಿ, ತಾಲೂಕಿನಲ್ಲಿ ಅಂತರ್ಜಲ ಮಟ್ಟ ಅಲ್ಪಮಟ್ಟಿಗೆ ಕುಸಿದಿದೆ, ಈಗಾಗಲೆ 53 ಹಳ್ಳಿಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳು ಎಂದು ಗುರುತಿಸಲಾಗಿದೆ. 18 ಹಳ್ಳಿಗಳಿಗೆ ಖಾಸಗಿ ಬೋರೈಲ್ಗಳನ್ನು ಗುರುತಿಸಲಾಗಿದೆ. ಇದರಲ್ಲಿಯೂ ನೀರು ಕಡಿಮೆಯಾಗುವ ಸಂಭವ ಇದೆ. ಇನ್ನೂ 14 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಪೂರೈಕೆ ಮಾಡುವ ಪರಿಸ್ಥಿತಿ ಬರಬಹುದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಪರಿಸ್ಥಿತಿ ಗಂಭೀರವಾದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ, ಒಟ್ಟಾರೆಯಾಗಿ ಕುಡಿಯುವ ನೀರು ಪೂರೈಕೆ ಮಾಡಲೇಬೇಕು. ಪ್ರತೀ ತಾಲೂಕಿಗೆ ತುರ್ತು ಕಾರ್ಯಗಳಿಗಾಗಿ 40 ಲಕ್ಷ ರೂ. ಅನುದಾನ ಒದಗಿಸಲಾಗಿದೆ ಎಂದರು.
ಅಲ್ಲದೆ ಟ್ಯಾಂಕರ್ ಮೂಲಕ ನೀರು ಸರಬರಾಜು ಪೂರೈಕೆ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ತುರ್ತಾಗಿ ಅಗತ್ಯವಿರುವೆಡೆ ತಹಸಿಲ್ದಾರರ ಸೂಚನೆ ಮೇರೆಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವವರಿಗೆ ಟೆಂಡರ್ ನಲ್ಲಿ ಅಂತಿಮವಾಗಿ ನಿಗದಿಯಾಗುವ ದರಕ್ಕೆ ಅನುಗುಣವಾಗಿ ಮೊತ್ತ ಪಾವತಿಸಲಾಗುವುದು ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಗ್ರಾಮೀಣ ಕುಡಿಯುವ ನೀರು ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪಾತಪ್ಪ, ನಗರಸಭೆ ಪೌರಾಯುಕ್ತ ರೇಣುಕಾ ಸೇರಿದಂತೆ ತಹಶೀಲ್ದಾಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.