ಮಹಿಳಾ ಕ್ರೀಡಾಪಟುಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ನ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ- ಕರ್ನಾಟಕ ವೇದಿಕೆ ಅಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಮತ್ತು ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, “ಇದು ಭಾರತದಲ್ಲಿ ಮಹಿಳಾ ಕ್ರೀಡಾಪಟುಗಳ ಸ್ವಾಭಿಮಾನ ಮತ್ತು ಮಹಿಳಾ ಆತ್ಮ ಗೌರವಕ್ಕಾಗಿ ನಡೆಸುತ್ತಿರುವ ಹೋರಾಟ ಹಾಗೂ ಅವರನ್ನು ಬೆಂಬಲಿಸುತ್ತೇವೆ” ಎಂದು ಘೋಷಣೆ ಮೊಳಗಿಸಿದರು.
“ಕ್ರೀಡಾಪಟುಗಳೊಂದಿಗೆ ರೈತರು ಇದ್ದೇವೆ” ಎನ್ನುವ ಸಂದೇಶವನ್ನು ನೀಡಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ದ್ರೌಪತಿ ಮುರ್ಮ ಅವರಿಗೆ ಮನವಿ ಸಲ್ಲಿಸಿದರು.
ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಕ್ರೀಡಾಪಟುಗಳು ಏಪ್ರಿಲ್ 24ರಿಂದ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ಬಳಿಕ ಆರೋಪಿ ಬ್ರಿಜ್ ಭೂಷಣ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.
ಕುಸ್ತಿಪಟುಗಳ ಆರೋಪದ ಹಿನ್ನೆಲೆಯಲ್ಲಿ ರಚಿಸಲಾದ ತನಿಖಾ ಸಮಿತಿ ವರದಿಯನ್ನು ಸಾರ್ವಜನಿಕರ ಗಮನಕ್ಕೆ ತರಬೇಕು. ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ನೊಂದ ಕ್ರೀಡಾಪಟುಗಳು ಸರ್ಕಾರದ ನಿರ್ಲಕ್ಷ ಹಾಗೂ ದೌರ್ಜನ್ಯದಿಂದ ಕಣ್ಣೀರು ಸುರಿಸುತ್ತಿದ್ದಾರೆ. ಇದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಭಾರತಕ್ಕೆ ಶೋಭೆ ತರುವುದಿಲ್ಲ” ಎಂದು ಕಿಡಿ ಕಾರಿದರು.
‘ಬೇಟಿ ಬಚಾವೋ ಬೇಟಿ ಪಡಾವೊ’ ಎಂದು ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಒಕ್ಕೂಟ ಸರ್ಕಾರ ಆರೋಪಿಗಳ ರಕ್ಷಣೆಗೆ ನಿಂತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು
“ಸಂಸತ್ ಭವನದ ಉದ್ಘಾಟನೆಯ ದಿನ ಸಂಯುಕ್ತ ಕಿಸಾನ್ ಮೋರ್ಚಾದ ಬೆಂಬಲದೊಂದಿಗೆ ಮಹಿಳಾ ರಕ್ಷಣೆ ಮಹಾ ಪಂಚಾಯತ್ ಸಂಸತ್ ಚಲೋ ನಡೆಸಿತು. ಭವನದ ಒಳಗೆ ಆರೋಪಿ ಗೌರವ ಪಡೆಯುವಾಗಲೇ, ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಹೀನಾಯ ದೌರ್ಜನ್ಯ ನಡೆಸಲಾಗಿದೆ” ಎಂದು ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
“ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶಕ್ಕೆ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದವರ ಮೇಲೆ ಕಿರುಕುಳವಾದರೆ ಮಹಿಳೆಯರ ಸುರಕ್ಷತೆ ಹೇಗೆ ಎಂಬ ಅನುಮಾನ ಕಾಡುತ್ತಿದೆ. ಕ್ರೀಡಾಪಟುಗಳ ಆತ್ಮಸ್ಥೈರ್ಯ ಮತ್ತು ಗೌರವವನ್ನು ಕುಂದಿಸುವ ಕೆಲಸವನ್ನು ಕೂಡಲೇ ಕೇಂದ್ರ ಸರ್ಕಾರ ನಿಲ್ಲಿಸಬೇಕು” ಎಂದು ಆಗ್ರಹಿಸಿದರು.
ರಾಜ್ಯ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ನುಲೇನೂರು, ಜಿಲ್ಲಾ ಘಟಕದ ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು, ರೈತ ಸಂಘ ಹಾಗೂ ಹಸಿರು ಸೇವೆ ರಾಜ್ಯ ಕಾರ್ಯಾಧ್ಯಕ್ಷ ಸಿದ್ಧವೀರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಡಿ ಎಸ್ ಹಳ್ಳಿ, ಮಲ್ಲಿಕಾರ್ಜುನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮರೆಡ್ಡಿ ಹಾಗೂ ಬಹುತೇಕ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.