ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗ್ಯಾರಂಟಿ ನೀಡಿದಂತೆ ಕೇಂದ್ರದಲ್ಲೂ ಗ್ಯಾರಂಟಿ ಅನುಷ್ಠಾನ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ ಮಕಾಂದಾರ್ ಹೇಳಿದರು.
ಚಿತ್ರದುರ್ಗ ನಗರದ 12ನೇ ವಾರ್ಡ್ ಅಗಸನಕಲ್ಲಿನಲ್ಲಿ ಫಾತೀಮಾ ಮಸೀದಿ ಸಮೀಪ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಕೇಂದ್ರ ಸರ್ಕಾರದ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದರು.
“ಕಾಂಗ್ರೆಸ್ಗೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ಕೋಮುವಾದಿ ಬಿಜೆಪಿಯಲ್ಲಿ ಯಾರೂ ಕೂಡಾ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಇಂದಿರಾಗಾಂಧಿ ರಾಜೀವ್ಗಾಂಧಿ ಇವರುಗಳು ದೇಶಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ. ನೆಹರು ಕುಟುಂಬದ ಕುಡಿ ರಾಹುಲ್ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜನತೆಗೆ ನೀಡಿದೆ” ಎಂದು ಹೇಳಿದರು.
“ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸರಳ, ಸಜ್ಜನ ರಾಜಕಾರಣಿ ಬಿ ಎನ್ ಚಂದ್ರಪ್ಪನವರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಗದಗ | ಕುಡಿಯುವ ನೀರಿಗಾಗಿ ಜನರ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ
ಕೆಡಿಪಿ ಸದಸ್ಯ ಕೆ ಸಿ ನಾಗರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ ಎನ್ ಮೈಲಾರಪ್ಪ, ಹನುಮಲಿ ಷಣ್ಮುಖಪ್ಪ, ಪರಮೇಶ್ ಇವರುಗಳು ಕಾಂಗ್ರೆಸ್ ಸರ್ಕಾರದ ಸಾಧನೆಗಳ ಕುರಿತು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಮನೆ ಮನೆಗೆ ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ಎನ್ ಚಂದ್ರಪ್ಪನವರ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರು, ಮತದಾರರಲ್ಲಿ ವಿನಂತಿಸಿದರು.
