ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ವಾಣಿವಿಲಾಸ ಜಲಾಶಯದಿಂದ ಐಮಂಗಲ ಹೋಬಳಿ ವ್ಯಾಪ್ತಿಯ 30 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಐಮಂಗಲ ಬಹುಗ್ರಾಮ ಕುಡಿವ ನೀರಿನ ಯೋಜನೆಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ವಿ.ವಿ.ಸಾಗರ ಜಲಾಶಯದ ಶುದ್ಧಿಕರಿಸಿದ ಶುದ್ಧ ಕುಡಿಯುವ ನೀರನ್ನು ಸುಮಾರು 30 ಹಳ್ಳಿಗಳಿಗೆ ಸರಬರಾಜು ಮಾಡುವ ಯೋಜನೆಯಾಗಿದ್ದು, ಈ ಯೋಜನೆಯ ಹಂತ-1ರ ರೂ.26.37 ಕೋಟಿ ವೆಚ್ಚದ ಕಾಮಗಾರಿಯನ್ನು ಉದ್ಘಾಟಿಸಿ ಕಾಮಗಾರಿಗೆ ಚಾಲನೆ ನೀಡುತ್ತಿದ್ದೇವೆ, ಪ್ಲೋರೈಡ್ ನೀರಿನ ಸಮಸ್ಯೆಯಿಂದ ಮುಕ್ತಿಗೊಳಿಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಬಹುದಿನದ ಕನಸು ನನಸಾಗಿರುವುದು ಸಂತಸ ತಂದಿದೆ ಎಂದರು.
ಹಿರಿಯೂರು ತಾಲೂಕಿನಲ್ಲಿ ಮಾರಿಕಣಿವೆ ಜಲಾಶಯವಿದ್ದರೂ ಐಮಂಗಲ ಹೋಬಳಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮಾರಿಕಣಿವೆ ಪಕ್ಕದ 800 ಅಡಿ ಎತ್ತರದ ಮೇಲೆ ಗುಡ್ಡದ ಮೇಲೆ 16 ಲಕ್ಷ ಲೀಟರ್ ಸಾಮಾಥ್ರ್ಯದ ನೀರಿನ ಟ್ಯಾಂಕರ್ ನಿರ್ಮಿಸಿ, ಗ್ರ್ಯಾವಿಟಿ ಆಧಾರದ ಮೇಲೆ ಐಮಂಗಲ ಹೋಬಳಿಯ ವ್ಯಾಪ್ತಿಯ ಸೂರಗೊಂಡನಹಳ್ಳಿ, ಐಮಂಗಲ, ಮೇಟಿಕುರ್ಕೆ, ಬುರುಜನರೊಪ್ಪ, ಮರಡಿಹಳ್ಳಿ, ಎಂ.ಡಿ.ಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 30 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.
ಮುಂದಿನ ಒಂದು ವರ್ಷದ ವೇಳೆಗೆ ಹಿರಿಯೂರಿನ ತಾಲ್ಲೂಕಿನ ಸುಮಾರು 300 ಹಳ್ಳಿಗಳಿಗೆ ವಾಣಿವಿಲಾಸ ಸಾಗರ ಜಲಾಶಯದಿಂದ ಕುಡಿಯುವ ನೀರು ಹರಿಸಲು ಕ್ರಮವಹಿಸಲಾಗುವುದು. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ವಿವರಿಸಿದರು.
ಹಿರಿಯೂರು ಸೇರಿದಂತೆ ಆರು ತಾಲ್ಲೂಕುಗಳು ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶಗಳು ಎಂದು ಘೋಷಣೆಯಾಗಿವೆ. ಜಿಲ್ಲೆಯ ಕೆಲ ಹಳ್ಳಿಗಳಲ್ಲಿ ನೀರಿನ ಸಮಸ್ಯೆಯಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲಾಗುವುದು, ಕುಡಿಯುವ ನೀರಿನ ತೊಂದರೆ ಇರುವ ಗ್ರಾಮಗಳಿಗೆ ಬೋರ್ವೆಲ್ ಕೊರೆಸುವ ವ್ಯವಸ್ಥೆ ಅಥವಾ ಟ್ಯಾಂಕರ್ಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.
ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಅಸ್ಲಾಂಬಾಷಾ, ಬೆಸ್ಕಾಂ ಎಇಇ ಪೀರ್ಸಾಬ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.