ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಹಾಗೂ ಸಾಸಲು ಗ್ರಾಮಗಳ ಮುಖಾಂತರ ಕಬ್ಬಿಣದ ಅದಿರು ತುಂಬಿದ ಲಾರಿಗಳು ಸಂಚರಿಸುವಾಗ ಆಗುತ್ತಿರುವ ತೊಂದರೆ ಹಾಗೂ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳನ್ನು ಪದೇ ಪದೆ ತಡೆದು ಪ್ರತಿಭಟನೆ ನಡೆಸುತ್ತಿರುವ ಕುರಿತು ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ಕಡ್ಡಾಯವಾಗಿ ಯಾರೂ ಕೂಡ ಸಾರ್ವಜನಿಕ ರಸ್ತೆ ತಡೆಯುವುದಕ್ಕೆ ಅವಕಾಶವಿಲ್ಲ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಹೇಳಿದರು.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಬ್ಬಿಣದ ಅದಿರು ಸಾಗಾಣಿಕೆ ಮಾಡುವ ವಾಹನಗಳ ರಹದಾರಿಯ ಕುರಿತು ಗಣಿ ಮಾಲೀಕರು, ಅದಿರು ಸಾಗಾಣಿಕೆದಾರರು ಮತ್ತು ಸ್ಥಳೀಯ ಗ್ರಾಮಸ್ಥರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಗಣಿಬಾಧಿತ ಪ್ರದೇಶಗಳ ಸ್ಥಳೀಯ ಗ್ರಾಮಸ್ಥರಿಗೂ ತೊಂದರೆಯಾಗುತ್ತಿರುವುದೂ ಕೂಡ ಗಮನಕ್ಕೆ ಬಂದಿದೆ. ಸ್ಥಳೀಯ ಗ್ರಾಮಸ್ಥರಿಗೆ ದೂಳಿನ ಸಮಸ್ಯೆ, ಕೃಷಿ ಚಟುವಟಿಕೆಗಳಿಗೆ ಆಗುತ್ತಿರುವ ತೊಂದರೆ, ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರ ದಟ್ಟಣೆ ಇತ್ಯಾದಿ ವಿಚಾರಗಳಿಗೆ ಸಂಬಂಧಪಟ್ಟಂತೆ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ಲೋಕೋಪಯೋಗಿ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಉಪವಿಭಾಗಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚನೆ ಮಾಡಲಾಗುವುದು” ಎಂದು ಹೇಳಿದರು.
“ಹೆಚ್ಚಿನ ವಾಹನ ಸಂಚಾರ ದಟ್ಟಣೆಯ ಗಣಿಬಾಧಿತ ಪ್ರದೇಶ ವ್ಯಾಪ್ತಿಯ ಗ್ರಾಮಗಳ ರಸ್ತೆಯನ್ನು ಅಪ್ಗ್ರೇಡ್ ಮಾಡುವುದು, ರಸ್ತೆ ದುರಸ್ತಿ ಹಾಗೂ ವಾಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇದರ ಜೊತೆಗೆ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನವನ್ನು ಸಂಬಂಧಪಟ್ಟ ಗಣಿ ಕಂಪನಿಗಳು ಕಡ್ಡಾಯವಾಗಿ ಮಾಡಬೇಕು. ಉಪ ಸಮಿತಿಯು ಶಿಫಾರಸು ಮಾಡುವ ಎಲ್ಲ ಸಲಹೆ-ಸೂಚನೆಗಳಿಗೆ ಗಣಿ ಕಂಪನಿಗಳು ಕಡ್ಡಾಯವಾಗಿ ಬದ್ಧರಿರಬೇಕು. ಉಪ ಸಮಿತಿಯು ಶಿಫಾರಸು ಮಾಡುವ ಸಲಹೆ-ಸೂಚನೆಗಳಿಗೆ ಗಣಿ ಕಂಪನಿಗಳು ಅಗತ್ಯ ಸಹಕಾರ ನೀಡದಿದ್ದರೆ ಕಬ್ಬಿಣದ ಅದಿರು ಸಾಗಾಣಿಕೆ ಮಾಡುವ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು” ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಎಚ್ಚರಿಕೆ ನೀಡಿದರು.
“ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಸ್ಥಳೀಯ ಗ್ರಾಮಸ್ಥರಿಗೆ ಟ್ಯಾಂಕರ್ ಪೂರೈಕೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಸೇರಿದಂತೆ ಸಿಎಸ್ಆರ್ ನಿಧಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಗಣಿ ಪ್ರದೇಶಗಳ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆಗೆ ಕ್ರಮ, ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡಲು ಪ್ರತ್ಯೇಕ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾತನಾಡಿ, “ಕಳೆದ ಕೆಲವು ತಿಂಗಳ ಹಿಂದೆ ಕಬ್ಬಿಣದ ಅದಿರು ತುಂಬಿದ ಲಾರಿಗಳ ಸಂಚಾರಕ್ಕೆ ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಸ್ಥಳೀಯ ಗ್ರಾಮಸ್ಥರು ವಾಹನಗಳ ಸಂಚಾರ ತಡೆಗೆ ಸಂಬಂಧಪಟ್ಟಂತೆ ದೂರುಗಳು ಬಂದಿದ್ದು, ಸಾರ್ವಜನಿಕರ ರಸ್ತೆಯ ವಾಹನ ಸಂಚಾರವನ್ನು ತಡೆಯುವ ಅಧಿಕಾರ ಯಾರಿಗೂ ಇಲ್ಲ. ಸಾರ್ವಜನಿಕ ರಸ್ತೆಯಲ್ಲಿ ವಾಹನಗಳನ್ನು ತಡೆದರೆ ಕಾನೂನು ಚೌಕಟ್ಟಿನಲ್ಲಿ ಎಫ್ಐಆರ್ ಪ್ರಕರಣವನ್ನೂ ದಾಖಲಿಸಬಹುದು. ಮುಂದಿನ ದಿನಗಳಲ್ಲಿ ಇದು ಹೀಗೆ ಮುಂದುವರೆದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದರು.
“ಗಣಿ ಪ್ರಾರಂಭದ ಸಂದರ್ಭದಲ್ಲಿ 10 ರಿಂದ 15 ವಾಹನಗಳ ಸಂಚಾರ ಇರುತ್ತದೆ. ಪ್ರಸ್ತುತ ದಿನಗಳಲ್ಲಿ ನಿತ್ಯವೂ 150ಕ್ಕೂ ಹೆಚ್ಚು ವಾಹನಗಳ ಸಂಚಾರ ನಡೆಯುತ್ತಿದೆ. ದೂಳಿನ ಸಮಸ್ಯೆಯಿಂದಾಗಿ ಆರೋಗ್ಯದ ಮೇಲೆ ದುಷ್ಪಾರಿಣಾಮಗಳು ಬೀರುತ್ತಿವೆ. ಕಿರಿದಾದ ರಸ್ತೆ ಇರುವುದರಿಂದ ಬಹಳ ತೊಂದರೆಯಾಗುತ್ತಿದೆ” ಎಂದು ಕಡ್ಲೆಗುದ್ದು, ಮೇಗಳಹಳ್ಳಿ, ಕಾಗಳಗೇರಿ, ಗ್ರಾಮಸ್ಥರು ಅಳಲು ತೋಡಿಕೊಂಡರು.
ಈ ಸುದ್ದಿ ಓದಿದ್ದೀರಾ? ಗದಗ | ಗ್ಯಾರಂಟಿಗಳು ಜನರನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕ್ರಮ: ಸಚಿವ ಎಚ್.ಕೆ ಪಾಟೀಲ
ಜಾನ್ ಮೈನ್ಸ್ನ ಧನಂಜಯ ಮಾತನಾಡಿ, “ಕಳೆದ ಐದು ತಿಂಗಳಿಂದ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿಲ್ಲ. ಹೊಸಪೇಟೆಯಿಂದ ಅದಿರು ತಂದು ಘಟಕ ನಡೆಸಲಾಗುತ್ತಿದ್ದು, ತೊಂದರೆ ಉಂಟಾಗಿದೆ. ಹೀಗಾಗಿ ಸ್ಥಳೀಯವಾಗಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡಲು ಅವಕಾಶ ಮಾಡಿಕೊಡಬೇಕು” ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ ಕಾರ್ತಿಕ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ ಮಹೇಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಮಲ್ಲಿಕಾರ್ಜುನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಫೆ, ಪರಿಸರ ಅಧಿಕಾರಿ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.