ಚಿತ್ರದುರ್ಗ ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್ ಜೆ ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸ್ವಚ್ಛತೆ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಕೈಗೊಳ್ಳುವ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಜಿಲ್ಲೆಯಲ್ಲಿ ಜನಜಾಗೃತಿ ಸಪ್ತಾಹದ ಅಂಗವಾಗಿ ವೈಯಕ್ತಿಕ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಹಾಗೂ ಪರಿಸರ ನೈರ್ಮಲ್ಯದ ನಿರ್ವಹಣೆ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಿ, ಗ್ರಾಮಗಳ ಮುಖಂಡರುಗಳಿಗೆ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕುರಿತು ಅರಿವು ಮೂಡಿಸಬೇಕು” ಎಂದು ಸೂಚಿಸಿದರು.
“ಕುಡಿಯಲು ಕಾಯಿಸಿ ಆರಿಸಿದ ನೀರನ್ನು ಉಪಯೋಗಿಸುವಂತೆ ಹೆಚ್ಚಿನ ಪ್ರಚಾರ ನೀಡಬೇಕು. ಕುಡಿಯುವ ನೀರಿನ ಮೂಲಗಳಿಂದ ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಮಾದರಿಗಳನ್ನು ನಿರಂತರವಾಗಿ ಸಂಗ್ರಹಿಸಿ, ಪರೀಕ್ಷಿಸಿ, ಕಲುಷಿತವಾಗಿರುವ ಮೂಲಗಳನ್ನು ತಕ್ಷಣ ಕ್ಲೋರಿನೇಷನ್ ಮಾಡಿಸಬೇಕು. ಶುದ್ಧ ಕುಡಿಯುವ ನೀರು ಹಾಗೂ ಸಮರ್ಪಕ ನೈರ್ಮಲ್ಯ ನಿರ್ವಹಣೆಯಲ್ಲಿ ಅಗತ್ಯವಿರುವ ದುರಸ್ಥಿ ಕಾರ್ಯಗಳನ್ನು ಪೂರ್ವಭಾವಿಯಾಗಿ ಗುರುತಿಸಿ ಸರಿಪಡಿಸಬೇಕು. ನೀರು ಸಂಗ್ರಹಿಸುವ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸಿ ನೀರು ಶೇಖರಿಸಬೇಕು” ಎಂದು ತಾಕೀತು ಮಾಡಿದರು.
ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ ತಡೆಯುವಲ್ಲಿ ರಾಜ್ಯ, ಕೇಂದ್ರ ಸರ್ಕಾರ ಸಂಪೂರ್ಣ ವಿಫಲ; ದಸಂಸ ಕಿಡಿ
ನೀರು ಪೂರೈಕೆ ಸೋರುವಿಕೆ ಗುರುತಿಸಿ ಕುಡಿಯುವ ನೀರು ಕಲುಷಿತವಾಗದಂತೆ ತಕ್ಷಣ ದುರಸ್ಥಿಗೊಳಿಸಬೇಕು. ಗ್ರಾಮದಲ್ಲಿ ಸಮರ್ಪಕವಾಗಿ ನೈರ್ಮಲ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಅನುಪಸ್ಥಿತಿಯಲ್ಲಿ ಕ್ಲೋರಿನೇಷನ್ ಕಾರ್ಯ ಕೈಗೊಳ್ಳಬೇಕು. ಈ ಕುರಿತು ತುರ್ತಾಗಿ ಕ್ರಮವಹಿಸಿ ವಾರದೊಳಗೆ ವರದಿ ಸಲ್ಲಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಎಂಜಿನಿಯರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ ಹಾಗೂ ಆರು ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಸಹಾಯಕ ನಿರ್ವಾಹಕ ಅಧಿಕಾರಿಗಳು ಇದ್ದರು.