ಜಯಪ್ರಕಾಶ್ ಹೆಗ್ಡೆ ಮನವಿಗೆ ಸ್ಪಂದಿಸಿರುವ ಸರ್ಕಾರವು, ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ಆದೇಶ ಹೊರಡಿಸಿದೆ.
ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದಿತ್ತು.
ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ, ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಅವರು, ಈ ವಿಚಾರದ ಕುರಿತು ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.
ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲೂಕುಗಳಲ್ಲಿ ಪೂರ್ಣವಾಗಿ, ಹೆಬ್ರಿ, ಕಾಪು ಉಡುಪಿಯೂ ಸೇರಿದಂತೆ ಕೆಲವು ಭಾಗಗಳಲ್ಲಿ ಮಾತೃ ಭಾಷೆಯಾಗಿ ಬಳಸುತ್ತಿರುವ ಕುಂದಾಪ್ರ ಭಾಷೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಕುಂದಗನ್ನಡ ಭಾಷೆಯ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ಕೊಡಲೇ ಒಂದೂವರೆ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ನಿವೇಶನಗಳ ಹಕ್ಕು ಪತ್ರ ನಕಲಿ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಪ್ರಜಾ ಪರಿವರ್ತನಾ ವೇದಿಕೆ ಆಗ್ರಹ
ಈ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮೊದಲ ಹಂತದ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದೆ ಹಂತ ಹಂತವಾಗಿ ಹಣ ಬಿಡುಗಡೆಯಾಗುವ ಭರವಸೆ ನೀಡಿರುವುದಾಗಿ ಜಯಪ್ರಕಾಶ ಹೆಗ್ಡೆ ಮಾಹಿತಿ ನೀಡಿದ್ದಾರೆ.
