- ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಂವಾದ
- ಷರತ್ತು ಉಲ್ಲಂಘಿಸಿ ಸಭೆ – ಸಮಾರಂಭ ನಡೆಸುವ ಬಗ್ಗೆ ಗಮನ ಹರಿಸಿ
ಕೊಪ್ಪಳ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಬೇಕು. ಮಾದರಿ ನೀತಿ ಸಂಹಿತೆ ಸಮರ್ಪಕ ಜಾರಿಗೆ ಒತ್ತು ಕೊಡಬೇಕು. ಈ ನಿಟ್ಟಿನಲ್ಲಿ ಚುನಾವಣಾ ಅಕ್ರಮಗಳ ಮೇಲೆ ವಿಶೇಷ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ ಬಾಬು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾಡಳಿತ ಭವನದಲ್ಲಿನ ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ಈಗಾಗಲೇ ಗಲವೆಡೆ ಸ್ಥಾಪಿಸಿದ 14 ಚೆಕ್ ಪೋಸ್ಟ್ಗಳಲ್ಲಿ ವಾಹನ ತಪಾಸಣೆಯನ್ನು ಬಿಗಿಗೊಳಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೆ ಒಳಪಡಿಸಬೇಕು. ತಪಾಸಣೆ ವೇಳೆ ಹಣ ಮತ್ತು ವಸ್ತುಗಳು ದೊರೆತಲ್ಲಿ ಪೂರಕವಾದ ದಾಖಲೆಗಳಿದ್ದರೆ ಮಾತ್ರ ಅನುಮತಿ ಕೊಡಬೇಕು ಎಂದು ತಿಳಿಸಿದರು.
ಸೂಕ್ತ ದಾಖಲೆಗಳಿಲ್ಲದೇ ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು ಪರಿಶೀಲನೆ ವೇಳೆ ಗೊತ್ತಾದಲ್ಲಿ ಅಂತಹ ಹಣ ಮತ್ತು ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಬೇಕು. ಪೊಲೀಸ್ ಮತ್ತು ಅಬಕಾರಿ ದಾಳಿಗಳನ್ನು ಸಹ ತೀವ್ರಗೊಳಿಸಬೇಕು ಎಂದು ಸೂಚಿಸಿದರು.
ಚೆಕ್ಪೋಸ್ಟ್ಗಳಲ್ಲಿ ವಿಶೇಷವಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರ ಪ್ರಮುಖವಾಗಿದೆ. ಅಕ್ರಮಗಳ ಬಗ್ಗೆ ಸಣ್ಣ ಸುಳಿವು ಸಿಕ್ಕಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಚೆಕ್ಪೋಸ್ಟ್ ತಪ್ಪಿಸಿ ಬೇರೆ ಮಾರ್ಗದಲ್ಲಿ ಅಕ್ರಮವಾಗಿ ಹಣ ಸಾಗಿಸುವ ಸಾಧ್ಯತೆ ಇದ್ದು, ಇಂತಹ ಅಕ್ರಮಗಳ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿ, ಅಕ್ರಮಗಳನ್ನು ಹತ್ತಿಕ್ಕಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ? ಪ್ರಜಾಪ್ರಭುತ್ವದಲ್ಲಿ ಜನರೇ ಜನಾರ್ಧನರು, ಮೋದಿ ದೇವರಲ್ಲ: ಸಿದ್ದರಾಮಯ್ಯ
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಅನುಮತಿ ಪಡೆಯದೇ ಅಥವಾ ಷರತ್ತುಗಳನ್ನು ಉಲ್ಲಂಘಿಸಿ ಸಭೆ – ಸಮಾರಂಭಗಳು ನಡೆಯುವುದರ ಬಗ್ಗೆ ಗಮನ ಹರಿಸಬೇಕು. ಎಲ್ಇಡಿ ವಾಹನ ಮೂಲಕ ಪ್ರಚಾರ, ಆಟೋ ಮೂಲಕ ಪ್ರಚಾರವನ್ನು ನಿಯಮಾನುಸಾರ ಅನುಮತಿ ಪಡೆಯದೇ ನಡೆಸುವುದು ಗೊತ್ತಾದಲ್ಲಿ, ಚುನಾವಣೆಗೆ ಸಂಬಂಧಿಸಿದ ಪ್ರಚಾರ ರ್ಯಾಲಿ ಮತ್ತು ಇನ್ನೀತರ ಕಾರ್ಯಕ್ರಮಗಳನ್ನು ನಡೆಸುವಾಗ ನಿಯಮ ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, ಕಾಲಕಾಲಕ್ಕೆ ವಿಡಿಯೋ ಸಂವಾದ ನಡೆಸಿ ನಿರ್ದೇಶನ ನೀಡಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಚೆಕ್ಪೋಸ್ಟ್ ಸೇರಿದಂತೆ ಇನ್ನೀತರ ಕಡೆಗಳಲ್ಲಿ ವಿಶೇಷ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ಬೇರೆ ಬೇರೆ ಕಾಯಿದೆಗಳ ಬಗ್ಗೆ ಅರಿತು ನಿಯಮಾನುಸಾರ ಪ್ರಕರಣ ದಾಖಲಿಸಿಕೊಂಡು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಹಲವು ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.